ಕಲಬುರ್ಗಿ: ಕೇಂದ್ರ ಸರ್ಕಾರದ ಬಜೆಟ್ನಲ್ಲಿ ಹೈದರಾಬಾದ್ ಕರ್ನಾಟಕಕ್ಕೆ ಹೆಚ್ಚಿನ ಒತ್ತು ನೀಡುವಂತೆ ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯವರು ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದಿದ್ದಾರೆ.
ರಾಷ್ಟ್ರೀಯ ಹೂಡಿಕೆ ಮತ್ತು ಉತ್ಪಾದನಾ ವಲಯ (ನಿಮ್ಸ್) ಸ್ಥಾಪನೆಗೆ ಕೇಂದ್ರ ಸರ್ಕಾರ ಮಂಜೂರಾತಿ ನೀಡಿದೆ. ಅದಕ್ಕೆ ಅವಶ್ಯವಿರುವ ಭೂಮಿ ಸ್ವಾಧೀನಕ್ಕೆ ಅನುದಾನ ನೀಡಬೇಕು. ಕಲಬುರ್ಗಿ ರೈಲ್ವೆ ವಿಭಾಗೀಯ ಕಚೇರಿ ಸ್ಥಾಪಿಸಬೇಕು ಮತ್ತು ಅದಕ್ಕೆ ಬೇಕಿರುವ ಅನುದಾನ ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ನಗರದಲ್ಲಿ ₹1,400 ಕೋಟಿ ವೆಚ್ಚದಲ್ಲಿ ಇಎಸ್ಐಸಿ ಆಸ್ಪತ್ರೆ ಸಮುಚ್ಛಯ ನಿರ್ಮಿಸಲಾಗಿದೆ. ಇಲ್ಲಿ ಲಭ್ಯವಿರುವ ಕಟ್ಟಡ ಮತ್ತು ಸೌಲಭ್ಯ ಉಪಯೋಗಿಸಿಕೊಂಡು ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್) ಸ್ಥಾಪಿಸಬೇಕು ಎಂದು ಕೋರಿದ್ದಾರೆ.
ಕೈಗಾರೀಕರಣದ ತೀವ್ರಗತಿಯ ಬೆಳವಣಿಗೆಗಾಗಿ ವಿಶೇಷ ಆರ್ಥಿಕ ವಲಯ ಘೋಷಿಸಬೇಕು. ಕೈಗಾರಿಕೆಗಳ ಸ್ಥಾಪನೆ ಮತ್ತು ಅಭಿವೃದ್ಧಿಗಾಗಿ ಕಲಬುರ್ಗಿ ಜಿಲ್ಲೆಯಲ್ಲಿ ಎರಡು ಸಾವಿರ ಎಕರೆ ವಿಸ್ತೀರ್ಣದಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಿಸಬೇಕು ಎಂದು ಆಗ್ರಹಿಸಿದ್ದಾರೆ.
ತೊಗರಿಗೆ ಭಾವಾಂತರ ಯೋಜನೆಯನ್ನು ಅನ್ವಯಿಸಿ ಆರ್ಥಿಕ ಸಹಾಯ ಒದಗಿಸಬೇಕು. ಕೃಷಿ ಆಧಾರಿತ ಕೈಗಾರಿಕೆ, ಆಹಾರ ಸಂಸ್ಕರಣ ಘಟಕಗಳನ್ನು ಸಂಕಷ್ಟದಿಂದ ಪಾರು ಮಾಡಲು ಹಣಕಾಸಿನ ಬೆಂಬಲ ನೀಡಬೇಕು. ಸಂಬಂಧಿಸಿದ ಸಚಿವರು ಈಗಾಗಲೇ ಭರವಸೆ ನೀಡಿರುವಂತೆಬೇವು ಲೇಪಿತ ರಸಗೊಬ್ಬರ ಉತ್ಪಾದಿಸುವ ಕಾರ್ಖಾನೆ ಹಾಗೂ ಕೌಶಲಾಭಿವೃದ್ಧಿ ವಿಶ್ವವಿದ್ಯಾಲಯ ಸ್ಥಾಪಿಸಬೇಕುಎಂದು ಕೋರಿದ್ದಾರೆ.
ರಸಗೊಬ್ಬರ, ಕೀಟನಾಶಕ ಮತ್ತು ಕ್ರಿಮಿನಾಶಕ ಮತ್ತು ಕೃಷಿ ಯಂತ್ರೋಪಕರಣಗಳ ಮೇಲಿನ ಜಿಎಸ್ಟಿಯನ್ನು ಹಿಂಪಡೆಯಬೇಕು. ಸಾಮಾನ್ಯ ತೆರಿಗೆದಾತರಿಗೆ ಅನುಕೂಲವಾಗುವಂತೆ ಆದಾಯ ತೆರಿಗೆಯ ವಿನಾಯಿತಿ ಮಿತಿಯನ್ನು ₹5 ಲಕ್ಷಕ್ಕೆ ಹೆಚ್ಚಿಸಬೇಕು ಎಂದು ಎಚ್ಕೆಸಿಸಿಐ ಅಧ್ಯಕ್ಷ ಅಮರನಾಥ ಸಿ.ಪಾಟೀಲ, ಗೌರವ ಕಾರ್ಯದರ್ಶಿ ಶಶಿಕಾಂತ ಬಿ.ಪಾಟೀಲ, ತೆರಿಗೆ ಉಪಸಮಿತಿ ಚೇರಮನ್ ಗುರುದೇವ ಎ.ದೇಸಾಯಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.