ADVERTISEMENT

ನೆರೆ ಹಾವಳಿ ಎದುರಿಸಲು ಸನ್ನದ್ಧರಾಗಿ: ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ

ಅಧಿಕಾರಿಗಳೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ವಿಡಿಯೋ ಸಂವಾದ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2025, 4:22 IST
Last Updated 27 ಆಗಸ್ಟ್ 2025, 4:22 IST
ಕಲಬುರಗಿ ಜಿಲ್ಲಾ ಆಡಳಿತದ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫೆರೆನ್ಸ್ ಮೂಲಕ ಸಚಿವ ಪ್ರಿಯಾಂಕ್‌ ಖರ್ಗೆ ಸಭೆ ನಡೆಸಿದರು   
ಕಲಬುರಗಿ ಜಿಲ್ಲಾ ಆಡಳಿತದ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫೆರೆನ್ಸ್ ಮೂಲಕ ಸಚಿವ ಪ್ರಿಯಾಂಕ್‌ ಖರ್ಗೆ ಸಭೆ ನಡೆಸಿದರು      

ಕಲಬುರಗಿ: ‘ಇತ್ತೀಚೆಗೆ ಜಿಲ್ಲೆಯಾದ್ಯಂತ ಸುರಿದ ಸತತ ಮಳೆ ಮತ್ತು ಮುಂದಿನ ದಿನದಲ್ಲಿ ಸಂಭಾವ್ಯ ನೆರೆ ಹಾವಳಿ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದರು.

ಸೋಮವಾರ ವಿಡಿಯೊ ಕಾನ್ಫೆರೆನ್ಸ್ ಮೂಲಕ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ‘ನೆರೆ ಹಾವಳಿಯಿಂದ ಯಾವುದೇ ರೀತಿಯ ಜನ-ಜಾನುವಾರು ಪ್ರಾಣ ಹಾನಿಯಾಗದಂತೆ ಎಚ್ಚರ ವಹಿಸಬೇಕು. ಮಳೆಯಿಂದ ಮನೆ ಕುಸಿದು ಬಿದ್ದಲ್ಲಿ, ಭಾಗಶಃ ಹಾನಿಯಾದಲ್ಲಿ ಎನ್.ಡಿ.ಆರ್.ಎಫ್./ ಎಸ್.ಡಿ.ಆರ್.ಎಫ್. ನಿಯಮಾವಳಿ ಪ್ರಕಾರ ತಕ್ಷಣವೇ ಪರಿಹಾರ ಒದಗಿಸಬೇಕು. ಯಾವುದೇ ವಿಳಂಬ ಸಲ್ಲದು’ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಬೆಳೆಹಾನಿ ಸಮೀಕ್ಷಾ ವರದಿ ನಿಖರವಾಗಿರಲಿ: ಪ್ರವಾಹ ಪೀಡಿತ ಪ್ರದೇಶದಲ್ಲಿ ಬೆಳೆ ಹಾನಿ ಕುರಿತು ಕಂದಾಯ, ಕೃಷಿ, ತೋಟಗಾರಿಕೆ ಅಧಿಕಾರಿಗಳು ಜಂಟಿ ಸಮೀಕ್ಷೆ ಕೈಗೊಂಡು ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಸಮೀಕ್ಷೆ ಕೈಗೊಳ್ಳುವ ಮುನ್ನ ಗ್ರಾಮದಲ್ಲಿ ಡಂಗೂರ ಸಾರಬೇಕು. ಹೆಚ್ಚಿನ ಪ್ರಚಾರ ನೀಡಿದಲ್ಲಿ ಮಾತ್ರ ರೈತರು ಪರಿಹಾರ ಪಡೆಯಲು ಸಾಧ್ಯವಾಗಲಿದೆ. ಬೆಳೆಹಾನಿ ವರದಿ ಕಾಟಾಚಾರವಾಗಿರದೆ ನಿಖರವಾಗಿರಬೇಕು ಎಂದು ಸೂಚಿಸಿದರು.

ADVERTISEMENT

ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಇದುವರೆಗಿನ ಮಳೆಯಿಂದಾದ ಬೆಳೆ, ರಸ್ತೆ, ಮನೆ ಹಾನಿ ಕುರಿತು ವಿವರಿಸಿದರು. ‘ಜಿಲ್ಲೆಯಾದ್ಯಂತ ಇರುವ ಜಲಾಶಯಗಳು ಶೇ 60 ರಿಂದ ಶೇ 85ರಷ್ಟು ಭರ್ತಿಯಾಗಿದ್ದು, ಪ್ರತಿ ದಿನ ಒಳ ಹರಿವು ಮತ್ತು ಹೊರ ಹರಿವಿನ ಮೇಲೆ ನಿಗಾ ಇರಿಸಲಾಗಿದೆ. 67 ಕೆರೆಗಳು ಸಂಪೂರ್ಣ ಭರ್ತಿಯಾಗಿದ್ದು, 51 ಕೆರೆಗಳು ಶೇ 90ರಷ್ಟು ಭರ್ತಿಯಾಗಿವೆ. ಜಿಲ್ಲೆಯಾದ್ಯಂತ ಪ್ರವಾಹಕ್ಕೆ ತುತ್ತಾಗುವ 153 ಗ್ರಾಮಗಳನ್ನು ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿಸಿದ್ದು, ಪ್ರವಾಹ ಬಂದಲ್ಲಿ ಸ್ಥಳೀಯರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲು 90 ಕಾಳಜಿ ಕೇಂದ್ರ ಸಹ ಗುರುತಿಸಿದೆ. ಅದೇ ರಿತಿ ಜಾನುವಾರುಗಳಿಗೆ ತಾತ್ಕಾಲಿಕ 40 ಗೋಶಾಲೆ ತೆರೆಯಲು ಸಹ ಯೋಜನೆ ರೂಪಿಸಲಾಗಿದೆ. ಇನ್ನು ಗ್ರಾಮವಾರು ಜಿಲ್ಲಾಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ನೆರೆ ಹಾವಳಿ ಕಾರ್ಯಕ್ಕೆ ತಾಲ್ಲೂಕು ಆಡಳಿತದೊಂದಿಗೆ ಸಮನ್ವಯ ಸಾಧಿಸಲು ಸೂಚಿಸಲಾಗಿದೆ’ ಎಂದು ಸಚಿವರಿಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಎಸ್.ಡಿ.ಶರಣಪ್ಪ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಜಿ.ಪಂ. ಸಿ.ಇ.ಒ ಭವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್, ಲೋಕೋಪಯೋಗಿ ಇಲಾಖೆಯ ಇ.ಇ. ಸುಭಾಷ ಬಿರಾದಾರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮುನಾವರ ದೌಲಾ, ಸಹಾಯಕ ಆಯುಕ್ತರಾದ ಸಾಹಿತ್ಯ, ಪ್ರಭುರೆಡ್ಡಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ತಾಲ್ಲೂಕಿನ ತಹಶೀಲ್ದಾರರು, ತಾ.ಪಂ. ಇ.ಒ.ಗಳು ಭಾಗವಹಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.