ಕಲಬರಗಿ: ‘ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಈ ಹಿಂದೆ ಗೃಹ ಸಚಿವರಾಗಿದ್ದ ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ರಕ್ಷಿಸಲು ಯತ್ನಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಬಲಿಪಶು ಆಗುತ್ತಿದ್ದಾರೆ’ ಎಂದು ಕೆಪಿಸಿಸಿ ವಕ್ತಾರ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದರು.
‘ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್ ಪೌಲ್ ಸೇರಿ ಈವರೆಗೆ 70 ಆರೋಪಿಗಳ ಬಂಧನವಾಗಿದೆ. ಆದರೆ, ನೇಮಕಾತಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂಬುದನ್ನು ಯಾವ ಆಧಾರದಲ್ಲಿ ಆರಗ ಜ್ಞಾನೇಂದ್ರ ಸದನದಲ್ಲಿ ಹೇಳಿದರು’ ಎಂದು ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.
‘ಎಡಿಜಿಪಿ ಬಂಧನವಾದರೂ ಏನೂ ನಡೆದೇ ಇಲ್ಲ ಎಂಬಂತೆ ಗೃಹ ಸಚಿವರು ವರ್ತಿಸುತ್ತಿದ್ದಾರೆ. ಅವರಿಗೆ ಸಾಮಾನ್ಯ ಜ್ಞಾನ ಇದೆಯೇ? 1.29 ಲಕ್ಷ ಜನ ಅರ್ಜಿ ಹಾಕಿ, 55 ಸಾವಿರ ಮಂದಿ ಪರೀಕ್ಷೆ ಬರೆದಿದ್ದಾರೆ. 545ರಲ್ಲಿ 350 ಹುದ್ದೆಗಳನ್ನು ಮಾರಾಟ ಮಾಡಿ ನಾಚಿಕೆ ಇಲ್ಲದೇ ಏನೇನೋ ಮಾತನಾಡುತ್ತಾರೆ’ ಎಂದು ಅವರು ಟೀಕಿಸಿದರು.
‘ವಿಧಾನ ಸೌಧದ 3ನೇ ಮಹಡಿಯಲ್ಲಿ ಇರುವವರು ಮತ್ತು ಐಪಿಎಸ್ ಅಧಿಕಾರಿಗಳು ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಇವತ್ತಿಗೂ ಕಾಣದ ಕೈ ಇದರ ಹಿಂದೆ ಕೆಲಸ ಮಾಡುತ್ತಿದೆ. ಸದ್ಯಕ್ಕೆ ಸೇಫ್ಟಿಪಿನ್ಗಳ ಬಂಧನವಾಗಿದ್ದು, ಕಿಂಗ್ಪಿನ್ ಬಂಧನವಾಗಿಲ್ಲ’ ಎಂದರು.
‘ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವರಾಗಿದ್ದ ಅವಧಿಯಲ್ಲಿ ಪಿಎಸ್ಐ ನೇಮಕಾತಿಗೆ ಸಂಬಂಧಿಸಿದಂತೆ ಏನೆಲ್ಲ ನಡೆಯಿತು ಎಂಬುದರ ಬಗ್ಗೆ ತನಿಖೆಯಾಗಲಿ. ಯಾರಿಗೆ, ಎಷ್ಟು ಕಮಿಷನ್ ಹೋಗಿದೆ ಎಂಬುದು ಬಹಿರಂಗವಾಗಲಿ’ ಎಂದು ಅವರು ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.