ಕಲಬುರ್ಗಿ: ಕಲ್ಯಾಣ ಕರ್ನಾಟಕ ವೃಂದದ ನೇರನೇಮಕಾತಿ ಪ್ರಕ್ರಿಯೆ ತಡೆ ಹಿಡಿದ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸದೇ ಸುಮ್ಮನಿರುವ ಜನಪ್ರತಿನಿಧಿಗಳು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ, ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕಲ್ಯಾಣ ಕರ್ನಾಟಕ ಸೈನ್ಯದ ಪದಾಧಿಕಾರಿಗಳು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
‘ಕಲ್ಯಾಣ ಕರ್ನಾಟಕ ಪ್ರದೇಶದ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು ರಾಜೀನಾಮೆ ನೀಡಿ ಮನೆಗೆ ಹೋಗಬೇಕು. ಕೊರೊನಾ ನೆಪದಲ್ಲಿ ಆರ್ಥಿಕ ಮುಗ್ಗಟ್ಟಿನಿಂದ ನೇಮಕಾತಿ ತಡೆಹಿಡಿಯಲಾಗಿದೆ ಎಂಬ ಮಾತನ್ನು ಒಪ್ಪುವುದಿಲ್ಲ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಮೇಲಿಂದ ಮೇಲೆ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ’ ಎಂದು ಟೀಕಿಸಿದರು.
‘ಸರ್ಕಾರದ ಕಲ್ಯಾಣ ಕರ್ನಾಟಕ ವಿರೋಧಿ ಧೋರಣೆಯನ್ನು ಖಂಡಿಸಿ ಎಲ್ಲ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು ಮುಖ್ಯವಾಗಿ ಬಿಜೆಪಿ ಜನಪ್ರತಿನಿಧಿಗಳು ಕೂಡಲೇ ರಾಜೀನಾಮೆ ನೀಡಬೇಕು’ ಎಂದು ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್.ಪಾಟೀಲ ನರಿಬೋಳ ಒತ್ತಾಯಿಸಿದರು.
ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಶಿವಲಿಂಗ ಹಳಿಮನಿ, ಕಲ್ಯಾಣ ಕರ್ನಾಟಕ ಸೇನೆ ಅಧ್ಯಕ್ಷ ದತ್ತು ಹೈಯ್ಯಾಳ ಕರ್ ಶ್ರೀರಾಮ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಿಕಾಂತ ಸ್ವಾದಿ, ತಾತಗೌಡ ಪಾಟೀಲ, ರಾಜು ಕಣಸೂರು, ಕಾಳಪ್ಪ ಪೂಜಾರಿ, ಗೌರಂಪಲ್ಲಿ, ಶ್ರೀದೇವಿ ಮುತ್ತಂಗಿ, ಮುತ್ತಣ್ಣ ಬಾಗೋಡಿ, ಮಹೇಶ್ ಗೊಬ್ಬುರ, ಮಲ್ಲು ಮೋಟಗಿ, ಆನಂದ್, ಸಂಗು ಕಾಡನೂರು ಮರಿಲಿಂಗ ಏಣಗಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.