ADVERTISEMENT

ಕಲಬುರ್ಗಿ: ರೈಲ್ವೆ ವಿಸ್ತರಣೆಗೆ ಆಗ್ರಹಿಸಿ ಪ್ರತಿಭಟನೆ, ನೀಲೂರಿನಲ್ಲಿ ನಿಷೇಧಾಜ್ಞೆ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 10:03 IST
Last Updated 29 ಸೆಪ್ಟೆಂಬರ್ 2020, 10:03 IST
ಗ್ರಾಮದ‌ ರೈಲ್ವೆ ಸೇತುವೆ ವಿಸ್ತರಣೆಗೆ ಒತ್ತಾಯಿಸಿ ಗ್ರಾಮಸ್ಥರಿಂದ ಪ್ರತಿಭಟನೆ
ಗ್ರಾಮದ‌ ರೈಲ್ವೆ ಸೇತುವೆ ವಿಸ್ತರಣೆಗೆ ಒತ್ತಾಯಿಸಿ ಗ್ರಾಮಸ್ಥರಿಂದ ಪ್ರತಿಭಟನೆ   

ಕಲಬುರ್ಗಿ: ಅಫಜಲಪುರ ತಾಲ್ಲೂಕಿನ ನೀಲೂರು ಗ್ರಾಮದ‌ ರೈಲ್ವೆ ಸೇತುವೆ ವಿಸ್ತರಣೆಗೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.‌ ಗ್ರಾಮದಲ್ಲಿ ಪೊಲೀಸರು ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಗ್ರಾಮದಲ್ಲಿ ರೈಲ್ವೆ ಹಳಿ ಜೋಡಿಮಾರ್ಗ ಕಾಮಗಾರಿ ನಡೆಯುತ್ತಿದ್ದು, ಈಗಿರುವ ರೈಲ್ವೆ ಸೇತುವೆ ವಿಸ್ತರಣೆ ಮಾಡಿ ಕಾಮಗಾರಿ ಮಾಡುವಂತೆ ಗ್ರಾಮಸ್ಥರ ಒತ್ತಾಯಿಸುತ್ತಿದ್ದಾರೆ. ಆದರೆ, ಸೇತುವೆ ವಿಸ್ತರಣೆ ಮಾಡದೇ ಕಾಮಗಾರಿ ಮಾಡಲು ರೈಲ್ವೆ ಇಲಾಖೆ ಮುಂದಾಗಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಹೀಗಾಗಿ ಮಂಗಳವಾರ ಬೆಳಿಗ್ಗೆಯಿಂದಲೇ ಗ್ರಾಮಸ್ಥರು ಕೂಡಿಕೊಂಡು ಪ್ರತಿಭಟನೆ ಹಮ್ಮಿಕೊಂಡಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಸಾರಿಗೆ ಸಂಸ್ಥೆಯ ಬಸ್ ಹಾದು ಹೋಗುವಷ್ಟಾದರೂ ಸೇತುವೆ ವಿಸ್ತರಿಸಬೇಕು ಎಂದು ಪಟ್ಟು ಹಿಡಿದಿದ್ದು, ರೈಲ್ವೆ ಕಾಮಗಾರಿ ನಡಯುವ ಸ್ಥಳಕ್ಕೆ ಹೋಗಿ ಕಾಮಗಾರಿ ತಡೆಯಲು ಯತ್ನಿಸಿದರು.

ADVERTISEMENT

ಈ ವೇಳೆ ಗ್ರಾಮಸ್ಥರನ್ನು ಪೊಲೀಸರು ತಡೆದರು. ಇದರಿಂದ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ, ವಾಗ್ವಾದ ಸಹ ನಡೆಯಿತು. ಇಡೀ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಇನ್ನು, ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೆಳಿಗ್ಗೆಯಿಂದಲೇ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.