ADVERTISEMENT

ಕಾಯಂಗೊಳಿಸಲು ಆಗ್ರಹಿಸಿ ಪ್ರತಿಭಟನೆ

ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಪೌರಕಾರ್ಮಿಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2021, 6:32 IST
Last Updated 13 ಏಪ್ರಿಲ್ 2021, 6:32 IST
ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ ದಿನಗೂಲಿ ಪೌರಕಾರ್ಮಿಕರಾಗಿ ಕೆಲಸ ಮಾಡುವವರನ್ನು ಕಾಯಂ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ, ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಯಿತು
ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ ದಿನಗೂಲಿ ಪೌರಕಾರ್ಮಿಕರಾಗಿ ಕೆಲಸ ಮಾಡುವವರನ್ನು ಕಾಯಂ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ, ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಯಿತು   

ಕಲಬುರ್ಗಿ: ಮಹಾನಗರ ಪಾಲಿಕೆಯ 377 ದಿನಗೂಲಿ ಪೌರ ಕಾರ್ಮಿಕರನ್ನು ಕಾಯಂಗೊಳಿಸದೆ ಬೇರೆ ಪೌರ ಕಾರ್ಮಿಕರನ್ನು ನೇಮಕ ಮಾಡಿದ್ದನ್ನು ಖಂಡಿಸಿ, ಪೌರ ಕಾರ್ಮಿಕರ ಹೋರಾಟ ಸಮಿತಿ ನೇತೃತ್ವದಲ್ಲಿ ಸೋಮವಾರ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾವಣೆಗೊಂದ ಪೌರ‌ಕಾರ್ಮಿಕರು ಅಧಿಕಾರಿಗಳ ಕ್ರಮಕ್ಕೆ ಆಕ್ರೋಶ ಹೊರಹಾಕಿದರು.

ಕಲಬುರ್ಗಿ ಮಹಾನಗರ ‍ಪಾಲಿಕೆಯಲ್ಲಿ 377 ಪೌರ ಕಾರ್ಮಿಕರು 26 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದೇವು. ನಮ್ಮಲ್ಲಿ ಈಗಾಗಲೇ ಹಲವಾರು ಪೌರ ಕಾರ್ಮಿಕರು ಮರಣ ಹೊಂದಿದ್ದಾರೆ. ಉಳಿದವರು ಇನ್ನೂ ದುಡಿಯುತ್ತಿದ್ದೇವೆ. ನಮ್ಮನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ಆರೋಪಿಸಿದರು.

ADVERTISEMENT

ಪೌರಕಾರ್ಮಿಕರನ್ನು ಕಾಯಂಗೊಳಿಸುವಂತೆ ಸಾಕಷ್ಟು ಬಾರಿ ಹೋರಾಟ ಮಾಡಿ ಜೈಲಿಗೆ ಹೋಗಿ ಬಂದಿದ್ದೇವೆ. ಹೋರಾಟ ಸಂದರ್ಭದಲ್ಲಿ ಪಾಲಿಕೆಯ ದಿನಗೂಲಿ ಪೌರ ಕಾರ್ಮಿಕರೆಂದು ನ್ಯಾಯಾಲಯ ಆದೇಶ ನೀಡಿದೆ. ಆದರೂ ಅಧಿಕಾರಿಗಳು ಆದೇಶ ಪಾಲಿಸಿಲ್ಲ ಎಂದೂ ದೂರಿದರು.

ಈ ಹಿಂದೆ ಜಿಲ್ಲಾ ಮಟ್ಟದಲ್ಲಿ ಅನೇಕ ಸಭೆಗಳು ನಡೆದಿದ್ದು, 377 ಪೌರ ಕಾರ್ಮಿಕರನ್ನು ಕಾಯಂಗೊಳಿಸುವ ಸಂದರ್ಭದಲ್ಲಿ ಸೇವೆ ಪರಿಗಣಿಸಿ ಕಾಯಂ ನೇಮಕ ಮಾಡಿಕೊಳ್ಳಬೇಕು ಎಂದು ನಿಯಮ ಮಾಡಲಾಗಿದೆ. ಆದರೆ, ಏ.6ರಂದು ತಾತ್ಕಾಲಿಕ ಪಟ್ಟಿ ಪ್ರಕಟಿಸಿದ್ದು, ಇದರಲ್ಲಿ ನಮ್ಮನ್ನು ಕೈ ಬಿಡಲಾಗಿದೆ ಎಂದೂ ಹೇಳಿದರು.

ಜಿಲ್ಲಾಧಿಕಾರಿ ಕೂಡಲೇ ಮಧ್ಯಪ್ರವೇಶಿಸಿ ಪೌರಕಾರ್ಮಿಕರ ನೇರ ನೇಮಕಾತಿ ಮತ್ತು ನೇರ ಪಾವತಿ ತಾತ್ಕಾಲಿಕ ಪಟ್ಟಿ ರದ್ದುಪಡಿಸಿ 377 ದಿನಗೂಲಿ ಪೌರಕಾರ್ಮಿಕ ಸೇವೆ ಪರಿಗಣಿಸಿ ಕಾಯಂ ಮಾಡಬೇಕು ಎಂದು ಒತ್ತಾಯಿಸಿದರು. ಬೇಡಿಕೆ ಈಡೇರಿಸಬೇಕು ಎಂದು ಅವರು ಆಗ್ರಹಿಸಿದರು.

ಮುಖಂಡರಾದ ಅರ್ಜುನ ಭದ್ರೆ, ಮರೆಪ್ಪ ಹಳ್ಳಿ, ಮಲ್ಲೇಶ ಸಜ್ಜನ, ಸೂರ್ಯಕಾಂತ ನಿಂಬಾಳಕರ್, ಸಂತೋಷ ಮೇಲ್ಮನಿ, ಹಣಮಂತ ಇಟಗಿ, ದಶರಥ ಕಲಬುರ್ಗಿ ಮುಂತಾದವರು ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.