ಕಲಬುರಗಿ: ತಾಲ್ಲೂಕಿನ ನಂದಿಕೂರ ಗ್ರಾಮದ ಮಲ್ಲಯ್ಯಸ್ವಾಮಿ ಅವರಿಗೆ ಸೇರಿದ ₹ 20 ಲಕ್ಷ ಹಣವನ್ನು ಲೂಟಿ ಮಾಡಿದ ಆರೋಪಿಗಳನ್ನು ಪತ್ತೆ ಹಚ್ಚಲು ವಿಫಲರಾದ ಪೊಲೀಸರ ನಿರ್ಲಕ್ಷ್ಯ ಧೋರಣೆ ಖಂಡಿಸಿ ಇದೇ 19ರಂದು ಪೊಲೀಸ್ ಕಮಿಷನರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಶ್ರೀರಾಮಸೇನೆ ರಾಜ್ಯ ಘಟಕದ ಅಧ್ಯಕ್ಷ ಆಂದೋಲಾದ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಮುಖ ಆರೋಪಿಯಾಗಿರುವ ಬಾಂಬೆ ಸತೀಶ್ನನ್ನು ವಿಚಾರಣೆಗೆ ಕರೆದುಕೊಂಡು ಬರಲು ಪೊಲೀಸರು ಮನೆಗೆ ಹೋದ ಸಂದರ್ಭದಲ್ಲಿ ಪಾಲಿಕೆಯ ಕಾಂಗ್ರೆಸ್ ಸದಸ್ಯೆಯಾಗಿರುವ ಆರೋಪಿಯ ಸಹೋದರಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಆದರೂ, ಆ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೇ, ಆರೋಪಿಯನ್ನು ಠಾಣೆಗೆ ಕರೆದೊಯ್ದಾಗ ಪ್ರಭಾವಿ ಸಚಿವರೊಬ್ಬರು ಕರೆ ಮಾಡಿದ ಬಳಿಕ ಆತನನ್ನು ಬಿಡುಗಡೆ ಮಾಡಿ ಕಳಿಸಿದ್ದಾರೆ. ನಂತರ ಬಂಧಿಸಿದರೂ ಕೂಡಲೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ಮತ್ತೊಬ್ಬ ಆರೋಪಿ ಕೊಂಡಿ ರಾಮ್ಯಾನನ್ನು ಮೂರು ತಿಂಗಳಾಗುತ್ತಾ ಬಂದರೂ ಪೊಲೀಸರು ಬಂಧಿಸುವ ಗೋಜಿಗೆ ಹೋಗಿಲ್ಲ’ ಎಂದು ಹರಿಹಾಯ್ದರು.
‘ಮಾದಿಗ ಸಮುದಾಯಕ್ಕೆ ಸೇರಿದ ರಾಜು ದೊಡ್ಡಮನಿ ಎಂಬುವವರು ಭಾಷಣ ಮಾಡಿದ್ದರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಆದರೆ, ಅದೇ ಸಂದರ್ಭದಲ್ಲಿ ಕಾಂಗ್ರೆಸ್ ಪಾಲಿಕೆ ಸದಸ್ಯರ ವಿರುದ್ಧ ಕ್ರಮಕ್ಕೆ ಹಿಂದೇಟು ಹಾಕುವುದು ಯಾವ ನ್ಯಾಯ?’ ಎಂದು ಪ್ರಶ್ನಿಸಿದರು.
ಚಿತ್ತಾಪುರ ತಾಲ್ಲೂಕಿನಲ್ಲಿ ಎಲ್ಲ ನಿಯಮಗಳನ್ನು ಮೀರಿ ಅಕ್ರಮ ಮರಳು ಸಾಗಾಟ ನಡೆಯುತ್ತಿದ್ದು, ಕ್ರಮ ಕೈಗೊಳ್ಳಲು ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಟೀಕಿಸಿದರು.
‘ಕಮಿಷನರ್ ಕಚೇರಿಯಲ್ಲಿ ವಿಷ ಕುಡಿಯುತ್ತೇವೆ’
ನಮ್ಮ ₹ 20 ಲಕ್ಷ ಹಣವನ್ನು ಲೂಟಿ ಮಾಡಿಕೊಂಡು ಹೋಗಿರುವ ಬಗ್ಗೆ ದೂರು ನೀಡಿದ್ದರೂ ಪೊಲೀಸರು ಗಂಭೀರವಾಗಿ ಪರಿಗಣಿಸಿಲ್ಲ. ಈ ಬಗ್ಗೆ ವಿಚಾರಿಸಲು ಹೋದರೆ ನಮಗೇ ಹತ್ತಾರು ಪ್ರಶ್ನೆ ಕೇಳಿ ಮಾನಸಿಕ ಕಿರುಕುಳ ಕೊಡುತ್ತಿದ್ದಾರೆ. ಹಣ ವಾಪಸ್ ಕೊಡಿಸದಿದ್ದರೆ ಮೇ 19ರಂದು ಪೊಲೀಸ್ ಕಮಿಷನರ್ ಕಚೇರಿ ಎದುರು ಧರಣಿ ನಡೆಸುವ ವೇಳೆ ವಿಷ ಕುಡಿದು ಸಾಯುತ್ತೇವೆ ಎಂದು ಹಣ ಕಳೆದುಕೊಂಡ ಲಕ್ಷ್ಮಿ ಮಠಪತಿ ಬೆದರಿಕೆ ಹಾಕಿದರು. ಮೂರು ತಿಂಗಳಿಂದ ನಾವು ಹಣ ಕಳೆದುಕೊಂಡು ನರಕಯಾತನೆ ಅನುಭವಿಸುತ್ತಿದ್ದೇವೆ. ಈ ಬಗ್ಗೆ ಪೊಲೀಸರು ಗಂಭೀರ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.