ಕಲಬುರ್ಗಿ: ‘ರಾಹುಲ್ ಗಾಂಧಿಯೇ ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ’ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸುವ ಸಾಧ್ಯತೆ ಕಡಿಮೆ ಇದೆ ಎಂಬ ಪಿ.ಚಿದಂಬರಂ ಹೇಳಿಕೆ ವೈಯಕ್ತಿಕ’ ಎಂದರು.
‘ಲೋಕಸಭೆ ಚುನಾವಣೆಗೆ ಇನ್ನೂ ಸಮಯವಿದೆ. ಮಹಾಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರಾಗುತ್ತಾರೆ ಎಂಬುದು ಚುನಾವಣೆ ವೇಳೆ ನಿರ್ಧಾರವಾಗುತ್ತದೆ. ಮಹಾಮೈತ್ರಿಕೂಟದ ಎಲ್ಲಾ ಪಕ್ಷಗಳ ಮುಖಂಡರು ಈ ಬಗ್ಗೆ ಚರ್ಚಿಸಿ, ಪ್ರಧಾನಿ ಅಭ್ಯರ್ಥಿ ಯಾರು ಎಂಬುದನ್ನು ನಿರ್ಧರಿಸುತ್ತಾರೆ. ಕಾಂಗ್ರೆಸ್ ನಾಯಕನಾದ ನನ್ನನ್ನು ಕೇಳಿದರೆ ರಾಹುಲ್ ಗಾಂಧಿ ಎಂದೇ ಹೇಳುತ್ತೇನೆ. ಕಾನೂನು ಮತ್ತು ಸಂವಿಧಾನವಕ್ಕೆ ಗೌರವ ಕೊಡದ ಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿಯಾಗಿದೆ’ ಎಂದು ತಿಳಿಸಿದರು.
ಇದನ್ನೂ ಓದಿ: ರಾಹುಲ್ ಪ್ರಧಾನಿಯಾದರೆ ತಪ್ಪೇನು?
ತನಿಖೆಗೆ ಆಗ್ರಹ: ‘ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ಅವರನ್ನು ನೇರವಾಗಿ ನೇಮಿಸಲು ಕಾರಣವೇನು ಎಂಬುದರ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು’ ಎಂದು ಅವರು ಒತ್ತಾಯಿಸಿದರು.
‘ರಾಕೇಶ್ ಅಸ್ತಾನಾ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೇರವಾಗಿ ಗೊತ್ತಿರುವ ವ್ಯಕ್ತಿ. ಇವರು ಜಾರ್ಖಂಡ್ದವರು ಹಾಗೂ ಗುಜರಾತ್ ಕೆಡರ್ನ ಐಪಿಎಸ್ ಅಧಿಕಾರಿ. ಪ್ರಧಾನಿ ಕಚೇರಿಯವರೇ ನೇರವಾಗಿ ಅವರನ್ನು ನೇಮಕ ಮಾಡಿಕೊಂಡಿದ್ದಾರೆ’ ಎಂದು ಆರೋಪಿಸಿದರು.
ಮಹಾರಾಷ್ಟ್ರದಲ್ಲಿ ಪ್ರಚಾರ: ‘ನನಗೆ ಪಕ್ಷ ಎಲ್ಲೆಲ್ಲಿ ಕೆಲಸ ಮಾಡಲು ಹೇಳುತ್ತದೆಯೋ ಅಲ್ಲಿಗೆ ಹೋಗಿ ಕೆಲಸ ಮಾಡುತ್ತೇನೆ. ಅ. 24ರಂದು ಮಹಾರಾಷ್ಟ್ರಕ್ಕೆ ಪ್ರಚಾರಕ್ಕೆ ಹೋಗುತ್ತಿದ್ದೇನೆ. ಸಮಯ ನಿಗದಿ ಮಾಡಿಕೊಂಡು ರಾಜ್ಯದಲ್ಲಿ ಉಪ ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಳ್ಳುತ್ತೇನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.