ಕಲಬುರ್ಗಿ: ಮಹಾರಾಷ್ಟ್ರದಲ್ಲಿ ಮಳೆ ಮುಂದುವರೆದಿದ್ದು ಅಲ್ಲಿನ ಜಲಾಶಯಗಳು ಭರ್ತಿಯಾಗಿದ್ದರಿಂದ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಸೊನ್ನ ಗ್ರಾಮದ ಬಳಿ ಇರುವ ಭೀಮಾ ನದಿಗೆ ಹರಿಬಿಡಲಾಗುತ್ತಿದ್ದು, ಇದರಿಂದಾಗಿ ಭೀಮಾ ನದಿಯಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಸದ್ಯ ಭೀಮಾ ಬ್ಯಾರೇಜ್ನಲ್ಲಿ ಒಳ ಹರಿವು 1.16 ಲಕ್ಷ ಕ್ಯುಸೆಕ್ ಮತ್ತು ಹೊರ ಹರಿವು 1.18 ಲಕ್ಷ ಕ್ಯುಸೆಕ್ ಹೊರ ಹರಿವು ಇದ್ದು, ಭೀಮಾ ಬ್ಯಾರೇಜಿನಿಂದ 9 ಗೇಟುಗಳ ಮೂಲಕ ನೀರನ್ನು ನದಿಗೆ ಬಿಡಲಾಗುತ್ತದೆ.
ಪ್ರವಾಹ ಪರಿಸ್ಥಿತಿ ಕುರಿತು ಮಾಹಿತಿ ನೀಡಿದ ಅಫಜಲಪುರ ತಹಶೀಲ್ದಾರ್ ಮಧ್ವರಾಜ್ ಕೂಡಲಗಿ, ಭೀಮಾ ನದಿಯಲ್ಲಿ ನೀರು ಅಪಾಯದ ಮಟ್ಟ ಹರಿಯುತ್ತಿರುವುದರಿಂದ ಮುಂಜಾಗೃತಾ ಕ್ರಮವಾಗಿ ಘತ್ತರಗಿ ಹಾಗೂ ದೇವಲ ಗಾಣಗಾಪೂರ ಬ್ರಿಜ್ ಕಂ ಬ್ಯಾರೇಜ್ಗಳ ಬಳಿ ಪೊಲೀಸ್ ಕಾವಲು ಹಾಕಲಾಗಿದೆ. ನದಿ ದಂಡೆಯ ಎಲ್ಲಾ ಊರುಗಳಲ್ಲಿ ಡಂಗುರ ಸಾರಿಸಿ ಎಚ್ಚರಿಕೆ ನೀಡಲಾಗಿದೆ ಎಂದರು.
ಕ್ರೀಡಾಕೂಟ ಮೊಟಕು: ಬೀದರ್ ನಗರದಲ್ಲಿ ನಡೆಯುತ್ತಿದ್ದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಅಂತರ ಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟದ ಕೆಲ ಕ್ರೀಡೆಗಳನ್ನು ವ್ಯಾಪಕ ಮಳೆಯಾಗಿದ್ದರಿಂದ ಮೊಟಕುಗೊಳಿಸಿ ಬೆಂಗಳೂರಿಗೆ ಸ್ಥಳಾಂತರಿಸಲಾಯಿತು. ಕ್ರೀಡೆಗಳು ನಡೆಯುತ್ತಿದ್ದ ನಗರದ ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜಿನ ಕ್ರೀಡಾಂಗಣವು ನೀರಿನಿಂದ ಆವೃತವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.