ಕಲಬುರಗಿ: ‘ಕರ್ನಾಟಕ ನಿವೃತ್ತ ನೌಕರರ ಕೇಂದ್ರ ಸಮಿತಿ ವೇದಿಕೆಯ ಜಿಲ್ಲಾ ಘಟಕದ ವತಿಯಿಂದ ಜೂನ್ 29ರಂದು ನಗರದ ಕನ್ನಡ ಭವನದಲ್ಲಿ ಜಿಲ್ಲಾ ಮಟ್ಟದ ಸಮಾವೇಶವನ್ನು ಆಯೋಜಿಸಲಾಗಿದೆ’ ಎಂದು ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರಣ್ಣ ಎಸ್.ಅವಂಟಿ ಹೇಳಿದರು.
‘ಅಂದು ಸಂಜೆ 4ಕ್ಕೆ ನಡೆಯುವ ಸಮಾವೇಶವನ್ನು ಶಾಸಕ ಅಲ್ಲಮಪ್ರಭು ಪಾಟೀಲ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ, ನಿವೃತ್ತ ಡಿಡಿಪಿಐ ಶಾಂತಗೌಡ ಪಾಟೀಲ, ವೇದಿಕೆಯ ಮಹಾಪ್ರಧಾನ ಸಂಚಾಲಕ ಎಂ.ಪಿ.ಎಂ. ಷಣ್ಮುಖಯ್ಯ, ಸಂಚಾಲಕರಾದ ಅಶೋಕ ಸಜ್ಜನ, ಎಸ್.ಜಿ. ಬಿಸೆರೊಟ್ಟಿ, ಜಲಜಾ ಶಂಕರ ಸೇರಿದಂತೆ ಹಲವರು ಪಾಲ್ಗೊಳ್ಳುವರು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಸಮಾವೇಶದಲ್ಲಿ 2022 ಜುಲೈ 1ರಿಂದ 2024ರ ಜುಲೈ 31ರ ನಡುವೆ ನಿವೃತ್ತ ಸರ್ಕಾರಿ ನೌಕರರಿಗೆ 7ನೇ ವೇತನ ಅನುಸಾರ ನಿವೃತ್ತಿಯ ಆರ್ಥಿಕ ಸೌಲಭ್ಯಗಳನ್ನು ನೀಡುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು’ ಎಂದರು.
ಜಿಲ್ಲಾ ಘಟಕದ ಮುಖಂಡ ಸಿದ್ದಣ್ಣ ಸಜ್ಜನ ಮಾತನಾಡಿ, ‘ಆರ್ಥಿಕ ಸೌಲಭ್ಯಗಳನ್ನು ಕಲ್ಪಿಸುವಂತೆ ಬೆಳಗಾವಿಯಲ್ಲಿ 2024ರಲ್ಲಿ ನಡೆದಿದ್ದ ಅಧಿವೇಶನದಲ್ಲಿ ಸರ್ಕಾರವನ್ನು ಒತ್ತಾಯಿಸಲಾಗಿತ್ತು. ನಮ್ಮ ಬೇಡಿಕೆಯನ್ನು ಈಡೇರಿಸುವ ಆಶ್ವಾಸನೆ ನೀಡಿದ್ದ ಸರ್ಕಾರ ಇದುವರೆಗೂ ನೀಡಿಲ್ಲ. ನಿವೃತ್ತರು ಆರ್ಥಿಕ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ’ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ನಿವೃತ್ತ ಬಿಇಒ ಭರತರಾಜ ಸಾವಳಗಿ, ಪ್ರಮುಖರಾದ ನೀಲಕಂಠಯ್ಯ ಹಿರೇಮಠ, ಬಿ.ಬಿ.ಪಾಟೀಲ, ನಾಗಪ್ಪ ನೆಲೋಗಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.