ಕಲಬುರಗಿ: ನಗರದ ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿರುವ ಬಾಪು ನಗರದ ಮಾಂಗರವಾಡಿ ಸಮುದಾಯದ ರಮೇಶ ವಿಜಯಕುಮಾರ್ ಕಾಳೆ ಎಂಬಾತನನ್ನು ಪೊಲೀಸ್ ಕಮಿಷನರ್ ಡಾ. ವೈ.ಎಸ್. ರವಿಕುಮಾರ್ ಅವರು ಜಿಲ್ಲೆಯಿಂದ ಗಡೀಪಾರು ಮಾಡಿ ಆದೇಶ ಹೊರಡಿಸಿದ್ದಾರೆ.
‘ರಮೇಶ ಕಲಬುರಗಿ ನಗರ ಹಾಗೂ ಜಿಲ್ಲೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ. ಮಾದಕ ದ್ರವ್ಯ ನಿಷೇಧ ಕಾಯ್ದೆಯಡಿ ವಿವಿಧ ಪೊಲೀಸ್ ಠಾಣೆಗಳಲ್ಲಿ 10 ಪ್ರಕರಣ ದಾಖಲಾಗಿದ್ದವು.
ಗಾಂಜಾ ಪ್ರಕರಣದಲ್ಲಿ ಬಂಧಿಸಿದಾಗ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ನಂತರ ಜಾಮೀನು ಷರತ್ತುಗಳನ್ನು ಉಲ್ಲಂಘನೆ ಮಾಡುತ್ತಿದ್ದ. ಆದ್ದರಿಂದ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮೇ 23ರಿಂದ ಒಂದು ವರ್ಷದವರೆಗೆ ಕಲಬುರಗಿ ಕಮಿಷನರೇಟ್ ಹಾಗೂ ಜಿಲ್ಲೆಯ ವ್ಯಾಪ್ತಿಯಿಂದ ಕೊಡಗು ಜಿಲ್ಲೆಯ ಭಾಗಮಂಡಲ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡೀಪಾರು ಮಾಡಲಾಗಿದೆ‘ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.