
ಕಲಬುರಗಿ: ಜಿಲ್ಲೆಯ ಚಿತ್ತಾಪುರದಲ್ಲಿ ನ.16ರಂದು ಆರ್.ಎಸ್.ಎಸ್ ಪಥಸಂಚಲನಕ್ಕೆ ಪರ್ಯಾಯವಾಗಿ ವಿವಿಧ ದಲಿತ ಪರ ಸಂಘಟನೆಗಳು ಚಿತ್ತಾಪುರದಲ್ಲಿ ನ.26ರಂದು ಸಂವಿಧಾನ ಸಮಾವೇಶ ನಡೆಸಲು ತೀರ್ಮಾನಿಸಿವೆ.
ನಗರದ ಐವಾನ್ ಎ ಶಾಹಿ ಅತಿಥಿ ಗೃಹದಲ್ಲಿ ಶುಕ್ರವಾರ ಭೀಮ್ ಆರ್ಮಿ, ಭಾರತೀಯ ದಲಿತ ಪ್ಯಾಂಥರ್ ಹಾಗೂ ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ಧಿ ಸಂಘ ಸೇರಿದಂತೆ ವಿವಿಧ ದಲಿತಪರ ಸಂಘಟನೆಗಳು ಶುಕ್ರವಾರ ಸಭೆ ನಡೆಸಿ ಈ ನಿರ್ಧಾರ ಪ್ರಕಟಿಸಿವೆ.
ಸಭೆ ಬಳಿಕ ಮಾತನಾಡಿದ ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸಮನಿ ಮಾತನಾಡಿ, 'ಕೋರ್ಟ್ ಸಮ್ಮುಖದಲ್ಲಿ ನ.16ರಂದು ಪಥಸಂಚಲಕ್ಕೆ ಆರ್ ಎಸ್ ಎಸ್ ಗೆ ಜಿಲ್ಲಾಡಳಿತ ಅನುಮತಿ ನೀಡಿದೆ. ಇದನ್ನು ನಾವು ಸ್ವಾಗತಿಸುತ್ತೇವೆ. ಅದೇ ದಿನ ನಾವು ಮೆರವಣಿಗೆ ಅಥವಾ ಜಾಥಾ ನಡೆಸಲು ಮೊದಲಿಗೆ ತೀರ್ಮಾನಿಸಿದ್ದೆವು. ಆದರೆ, ಈಗ ಆರ್.ಎಸ್.ಎಸ್ ಪಥಸಂಚಲನಕ್ಕೆ ಪರ್ಯಾಯವಾಗಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ಸಂವಿಧಾನವನ್ನು ಸಮರ್ಪಿಸಿದ ಸ್ಮರಣಾರ್ಥ ಚಿತ್ತಾಪುರದಲ್ಲಿ ನವೆಂಬರ್ 26ರಂದು ಸಂವಿಧಾನ ಸಮಾವೇಶ ನಡೆಸಲು ಸಂಘಟನೆಗಳ ಸಭೆಯಲ್ಲಿ ನಿರ್ಧರಿಸಲಾಗಿದೆ' ಎಂದರು.
ಭೀಮ್ ಆರ್ಮಿ ರಾಜ್ಯ ಯುವ ಘಟಕದ ಅಧ್ಯಕ್ಷ ಸಂತೋಷ ಪಾಳಾ, ಕರ್ನಾಟಕ ಛಲವಾದಿ ಕ್ಷೇಮಾಭಿವೃದ್ಧಿ ಸಂಘದ ಮುಖಂಡ ದಿನೇಶ ದೊಡಮನಿ, ಸಂತೋಷ ಮೇಲ್ಮನಿ, ದೇವೇಂದ್ರ ಸಿರನೂರ, ರಾಹುಲ್ ಉಪ್ಪಾರ, ಗುಂಡಪ್ಪ ಲಂಡನಕರ, ಸಿದ್ಧಾರ್ಥ ದಿಕ್ಸಂಗಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.