ಸಿದ್ದರಾಮಯ್ಯ, ಮುಖ್ಯಮಂತ್ರಿ
– ಪ್ರಜಾವಾಣಿ ಚಿತ್ರ
ಕಲಬುರಗಿ: 'ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶವಿದ್ದು, ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇನೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು.
ನಗರದಲ್ಲಿ ಭಾನುವಾರ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಬೇಕು ಎನ್ನುವ ಬೇಡಿಕೆ ಬಹಳ ವರ್ಷಗಳಿಂದ ಇದೆ. ಪ್ರತ್ಯೇಕ ಸಚಿವಾಲಯ ಮಾಡುವ ಉದ್ದೇಶ ನಮಗೆ ಇದೆ' ಎಂದರು.
'ತೊಗರಿಗೆ ಪ್ರತ್ಯೇಕ ಪ್ಯಾಕೇಜ್ ಘೋಷಿಸುವಂತೆ ರೈತರು ಬೇಡಿಕೆ ಇಟ್ಟಿದ್ದಾರೆ. ತೊಗರಿ ಬೆಳೆಯ ಸ್ಥಿತಿ ಗತಿ ಕುರಿತ ವರದಿ ಕೇಳಿದ್ದೇವೆ. ಈ ವರದಿ ಬಂದ ಬಳಿಕ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು' ಎಂದು ಭರವಸೆ ನೀಡಿದರು.
'ಕಲ್ಯಾಣ ಕರ್ನಾಟಕದ ಆರೋಗ್ಯ ವ್ಯವಸ್ಥೆಯಲ್ಲಿ ಜಯದೇವ ಆಸ್ಪತ್ರೆ ಮಹತ್ವದ್ದು. ರಾಜ್ಯ ಸಭೆ ಪ್ರತಿಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೋರಾಟದ ಫಲವಾಗಿ 371 ಜೆ ಜಾರಿಯಾಗಿದೆ. 371 ಬೆಡ್ಗಳ ಆಸ್ಪತ್ರೆಯನ್ನು ಉದ್ಘಾಟಿಸುತ್ತಿದ್ದೇವೆ' ಎಂದರು.
'ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿ.ಟಿ.ರವಿ ಬಳಸಿದ ಪದ ಅತ್ಯಂತ ಅನಾಗರಿಕವಾದದ್ದು. ಇದು ಕ್ರಿಮಿನಲ್ ಅಪರಾಧ. ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿ ಆಗಿದ್ದ ರವಿ ಅವರ ಬಾಯಿಯಲ್ಲಿ ಇಂತಹ ಮಾತು ನಾಚಿಕೆಗೇಡಿನದ್ದು. ವಿಧಾನ ಪರಿಷತ್ನ ಇತರೆ ಸದಸ್ಯರು ರವಿ ಅವರು ಆ ಪದ ಬಳಸಿರುವುದನ್ನು ಕೇಳಿಸಿಕೊಂಡಿದ್ದಾರೆ. ರವಿ ಅವರು ಅತ್ಯಂತ ತುಚ್ಛವಾಗಿ ಮಾತಾಡಿರುವುದು ಸತ್ಯ ಎಂದು ಒಪ್ಪಿಕೊಂಡಿದ್ದಾರೆ' ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.