
ಮುನಿರಾಬಾದ್: ಸಮೀಪದ ಶಹಾಪುರ ಗ್ರಾಮದ ಮುಖ್ಯರಸ್ತೆ ಮೇಲೆ ಗೃಹಬಳಕೆ ತ್ಯಾಜ್ಯದ ನೀರು ಮತ್ತು ಚರಂಡಿ ನೀರು ಒಟ್ಟಿಗೆ ಹರಿಯುತ್ತಿದೆ. ಸಾರ್ವಜನಿಕರು ಅದರ ಮೇಲೆಯೇ ನಡೆದಾಡುವ ಸ್ಥಿತಿ ನಿರ್ಮಾಣವಾಗಿದೆ.
ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹಾಗೂ ಕೂಲಿ ಕಾರ್ಮಿಕರಿದ್ದು, ಗ್ರಾಮವೂ ಸೂಮಾರು 2ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷದಿಂದ ಸ್ವಚ್ಛತೆ ಮರೀಚಿಕೆಯಾಗಿದೆ ಎನ್ನುತ್ತಾರೆ ಗ್ರಾಮಸ್ಥರು.
‘ಗ್ರಾಮದಲ್ಲಿ ಕಿರಿಯ ಆರೋಗ್ಯ ಸಹಾಯಕರ ಕೇಂದ್ರ ಇದ್ದರೂ ಅಧಿಕಾರಿಗಳು ಕಾಳಜಿ ವಹಿಸುತ್ತಿಲ್ಲ. ಸಂಬಂಧಪಟ್ಟವರು ಸೂಕ್ತ ರಸ್ತೆ, ಚರಂಡಿ ವ್ಯವಸ್ಥೆ ಕಲ್ಪಿಸಿ’ ಎಂದು ಯುವ ಮುಖಂಡ ವೀರಣ್ಣ ಕೋಮಲಾಪುರ ಆಗ್ರಹಿಸಿದ್ದಾರೆ.
ನಾಲ್ಕೈದು ವರ್ಷಗಳ ಹಿಂದೆ ಸರ್ಕಾರಿ ಶಾಲೆಗೆ ಗ್ರಾಮದ ಹೊರವಲಯದಲ್ಲಿ ಹೊಸ ಕಟ್ಟಡ ನಿರ್ಮಿಸಲಾಗಿದೆ. ಈಗ ಶಾಲೆಯನ್ನು ಅಲ್ಲಿಗೆ ಸ್ಥಳಾಂತರಿಸಲಾಗಿದ್ದು, ಊರ ಮಧ್ಯ ಭಾಗದಲ್ಲಿರುವ ಹಳೆಯ ಶಾಲಾ ಕಟ್ಟಡ ಪಾಳು ಬಿದ್ದು ಹಂದಿಗಳ ಆವಾಸ ಸ್ಥಾನವಾಗಿ ಪರಿವರ್ತನೆಯಾಗಿದೆ. ಶಿಥಿಲ ಕಟ್ಟಡ ತೆರವುಗೊಳಿಸಿ, ಒತ್ತುವರಿ ತಪ್ಪಿಸಿ ಸಾರ್ವಜನಿಕ ಸ್ಥಳವನ್ನು ಸಂರಕ್ಷಿಸಬೇಕು ಎನ್ನುತ್ತಾರೆ ನಿವಾಸಿಗಳು.
ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ಈ ಮೊದಲು ₹40 ಲಕ್ಷ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದು ಗ್ರಾಮ ಪಂಚಾಯಿತಿ ಅನುದಾನದಲ್ಲಿ ಅಸಾಧ್ಯ ಎಂದು ಕಂಡುಬಂದ ಹಿನ್ನೆಲೆಯಲ್ಲಿ ಬೇವಿನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರ್ಲೋಸ್ಕರ್ ಫೆರಸ್ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ರಸ್ತೆ ಮತ್ತು ಚರಂಡಿ ನಿರ್ಮಿಸಲು ಮುಂದೆ ಬಂದಿತ್ತು. ಆದರೆ ಗ್ರಾಮಸ್ಥರ ಅಸಹಕಾರದಿಂದ ಅದು ನೆನೆಗುದಿಗೆ ಬಿದ್ದಿದೆ ಎನ್ನುತ್ತಾರೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಿಂಗಪ್ಪ ನಾಗಲಾಪುರ.
ಕಿರ್ಲೋಸ್ಕರ್ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅನುದಾನ ಬಳಸಿ ಮುಂದಿನ ದಿನಗಳಲ್ಲಿ ಗ್ರಾಮಸ್ಥರ ಸಹಕಾರದೊಂದಿಗೆ ರಸ್ತೆ ಚರಂಡಿ ನಿರ್ಮಿಸುವ ಗುರಿ ಹಾಕಿಕೊಳ್ಳಲಾಗಿದೆನಾಗರಾಜ ಬಾದರಬಂಡಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.