ADVERTISEMENT

ರಾಜಕೀಯ ಪಕ್ಷಗಳಿಗೆ ನಿಯಮ ಅನ್ವಯವಿಲ್ಲವೇ: ಶರಣು ಪಪ್ಪಾ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2022, 6:05 IST
Last Updated 10 ಜನವರಿ 2022, 6:05 IST

ಕಲಬುರಗಿ: ‘ಕೋವಿಡ್ ಕರ್ಫ್ಯೂ ವೇಳೆ ವ್ಯಾಪಾರಸ್ಥರು ಕೋವಿಡ್ ನಿಯಮಾವಳಿ ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕೆ ಕರ್ನಾಟಕ ಸಾಂಕ್ರಾಮಿಕ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆದರೆ, ರಾಜಕೀಯ ಪಕ್ಷವು ಪಾದಯಾತ್ರೆ ನಡೆಸಿದರೂ ಸರ್ಕಾರ ಏಕೆ ಕ್ರಮ ಕೈಗೊಂಡಿಲ್ಲ?’ ಎಂದು ಎಚ್‌ಕೆಸಿಸಿಐ ಗೌರವ ಕಾರ್ಯದರ್ಶಿ ಶರಣು ಪಪ್ಪಾ ಪ್ರಶ್ನಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಕಲಬುರಗಿಯ ಸೂಪರ್ ಮಾರ್ಕೆಟ್‌ನಲ್ಲಿ ಏಕಾಏಕಿಯಾಗಿ ನೂರಾರು ಅಂಗಡಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದರು.‌ ಇಷ್ಟೊಂದು ಪ್ರಕರಣಗಳನ್ನು ಕಲಬುರಗಿಯಲ್ಲಿ ಮಾತ್ರ ದಾಖಲಿಸಿಕೊಳ್ಳಲಾಗಿದೆ. ಆದರೆ, ಮೇಕೆದಾಟು ಯೋಜನೆಗಾಗಿ ಭಾನುವಾರ ಆರಂಭವಾದ ಪಾದಯಾತ್ರೆಯಲ್ಲಿ ಸಾವಿರಾರು ಜನ ಭಾಗವಹಿಸಿದ್ದರು. ಅವರಿಗಿಲ್ಲದ‌ ಕೋವಿಡ್ ನಿಯಮಾವಳಿ ‌ವ್ಯಾಪಾರಸ್ಥರಿಗೆ ಮಾತ್ರ ಏಕೆ?’ ಎಂದೂ ಅವರು ಕೇಳಿದ್ದಾರೆ.

‘ಇಂದಿಗೂ ನೂರಾರು ವ್ಯಾಪಾರಿಗಳು ನ್ಯಾಯಾಲಯಕ್ಕೆ ಅಲೆದಾಡುತ್ತಿದ್ದಾರೆ. ಹೀಗಾಗಿ ನಮ್ಮ ‌ಮನವಿಗೆ ಸ್ಪಂದಿಸಿ ಪ್ರಕರಣಗಳನ್ನು ವಾಪಸ್ ಪಡೆಯಬೇಕು’ ಎಂದು ಅವರು ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.