ADVERTISEMENT

ಮಹಿಳಾ ಸ್ವಾವಲಂಬನೆಗೆ ಬದ್ಧ: ಶಶಿಕಲಾ ಟೆಂಗಳಿ ಭರವಸೆ

​ಪ್ರಜಾವಾಣಿ ವಾರ್ತೆ
Published 31 ಜುಲೈ 2020, 15:31 IST
Last Updated 31 ಜುಲೈ 2020, 15:31 IST
ಕಲಬುರ್ಗಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಾಗಾರವನ್ನು ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೇಂಗಳಿ ಉದ್ಘಾಟಿಸಿದರು
ಕಲಬುರ್ಗಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಾಗಾರವನ್ನು ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೇಂಗಳಿ ಉದ್ಘಾಟಿಸಿದರು   

ಕಲಬುರ್ಗಿ: ‘ಮಹಿಳಾ ಅಭಿವೃದ್ಧಿ ನಿಗಮವು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಅದರಲ್ಲೂ ವಿಶೇಷವಾಗಿ ದುರ್ಬಲ ವರ್ಗದವರ ಅಭಿವೃದ್ಧಿಗಾಗಿ ಜಾರಿಯಲ್ಲಿರುವ ಯೋಜನೆಗಳು ಸಮಾಜದ ಕಟ್ಟ ಕಡೆಯ ಮಹಿಳೆಯರಿಗೆ ಸಮಾನವಾಗಿ ತಲುಪಿಸಲಾಗುತ್ತಿದೆ ಎಂದು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ಹೇಳಿದರು.‌

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಗರದ ಅಂಧ ಬಾಲಕರ ಶಾಲೆಯಲ್ಲಿ, ಶುಕ್ರವಾರ ಲಿಂಗತ್ವ ಅಲ್ಪಸಂಖ್ಯಾತ ಪುನರ್ವಸತಿ ಯೋಜನೆಯಡಿ ಆಯ್ಕೆಯಾದ 21 ಫಲಾನುಭವಿಗಳಿಗೆ ‘ಸಾಲ ನಿರ್ವಹಣೆ, ಲೆಕ್ಕಪತ್ರ ನಿರ್ವಹಣೆ, ಬ್ಯಾಂಕಿನ ಜತೆ ವ್ಯವಹರಿಸುವ ಘಟಕ ಸ್ಥಾಪನೆ ಅಗತ್ಯ ಮಾಹಿತಿ ಒದಗಿಸುವ ಒಂದು ದಿನದ ಅರಿವು ಕಾರ್ಯಾಗಾರ’ ಉದ್ಘಾಟಿಸಿ ಅವರು ಮಾತನಾಡಿದರು.

‘ಸಮಾಜದ ತಳಮಟ್ಟದಲ್ಲಿರುವ ವಿಮುಕ್ತ ದೇವದಾಸಿ ಮಹಿಳೆಯರು, ದಮನಿತ ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು. ಎಚ್.ಐ.ವಿ ಸೋಂಕಿತ ಮಹಿಳೆಯರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ’ ಎಂದರು.

ADVERTISEMENT

‘ತಾಲ್ಲೂಕು ಮಟ್ಟದಲ್ಲಿ ನಿಗಮದ ಯೋಜನೆಗಳ ಅನುಷ್ಠಾನದಲ್ಲಿನ ತೊಡಕು ನಿವಾರಿಸಲು ತಾಲ್ಲೂಕು ಮತ್ತು ಹೋಬಳಿ ಮಟ್ಟದಲ್ಲಿ ಯೋಜನೆಗಳ ಫಲಾನುಭವಿಗಳ ಸಂವಾದ ಕಾರ್ಯಕ್ರಮ ಆಯೋಜಿಸಿ ಸಮಸ್ಯೆ ಆಲಿಸಿ, ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಈಗಾಗಲೇ ಸಮೃದ್ಧಿ ಯೋಜನೆಯಡಿ ಆಳಂದ ತಾಲ್ಲೂಕಿನ ಮಹಿಳಾ ಬೀದಿ ವ್ಯಾಪಾರಿಗಳಿಗೆ ಕೋವಿಡ್ ಸಂಕಷ್ಟ ಪರಿಸ್ಥತಿಯಲ್ಲಿ ಆರ್ಥಿಕ ಸಹಾಯಧನ ನೀಡಲಾಗಿದೆ’ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದಿ ಇಲಾಖೆ ಉಪ ನಿರ್ದೇಶಕ ಜಿ.ಎಸ್.ಗುಣಾರಿ ಮಾತನಾಡಿ, ‘ಕೊರೊನಾ ಸಂಕಷ್ಟ ಪರಿಸ್ಥಿತಿಯಿರುವ ಕಾರಣ ಸಾಲದ ಹಣವನ್ನು ಸದುಪಯೋಗ ಪಡೆದು ಸಕಾಲಕ್ಕೆ ಸಾಲ ಮರುಪಾವತಿ ಮಾಡಬೇಕು’ ಎಂದರು.

ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ಎ.ವಿ.ಪಾಟೀಲ್, ಸಾಲ ನಿರ್ವಹಣೆ, ಘಟಕ ಸ್ಥಾಪನೆ, ಮರುಪಾವತಿ, ಕೇಂದ್ರ ಸರ್ಕಾರದ ಯೋಜನೆಗಳು, ಕ್ರೆಡಿಟ್ ಕಾರ್ಡ, ಫೋನ್‌ಪೇ, ಗೂಗಲ್ ಪೇ ನಿರ್ವಹಣೆ ಕುರಿತು ಉಪನ್ಯಾಸ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.