ADVERTISEMENT

ಕಲಬುರ್ಗಿಯಲ್ಲಿ ರಾಜ್ಯಮಟ್ಟದ ‌ಪತ್ರಕರ್ತರ ಸಮ್ಮೇಳನ ಆಯೋಜನೆ: ಶಿವಾನಂದ ತಗಡೂರು

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2021, 9:50 IST
Last Updated 19 ಸೆಪ್ಟೆಂಬರ್ 2021, 9:50 IST

ಕಲಬುರ್ಗಿ: 25 ವರ್ಷಗಳ ನಂತರ ಕಲ್ಯಾಣ ಕರ್ನಾಟಕದ ವಿಭಾಗೀಯ ಕೇಂದ್ರ ಕಲಬುರ್ಗಿಯಲ್ಲಿ ಕರ್ನಾಟಕ ರಾಜ್ಯ 36ನೆಯ ಪತ್ರಕರ್ತರ ಸಮ್ಮೇಳನ ನಡೆಸಲು ಸಿದ್ದತೆಗಳನ್ನು ಆರಂಭಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು.

ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನ ಉದ್ಘಾಟನೆ ನೆರವೇರಿಸುವಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದೇವೆ. ವಾರದೊಳಗೆ ದಿನಾಂಕ ನಿಗದಿ ಮಾಡಲಿದ್ದಾರೆ. ನವೆಂಬರ್ ಎರಡನೇ ವಾರದಲ್ಲಿ ಸಮ್ಮೇಳನದ ದಿನಾಂಕ ನಿಗದಿಯಾಗಲಿದೆ ಎಂದರು.

1996ರಲ್ಲಿ ಕಲಬುರ್ಗಿಯಲ್ಲಿ 20ನೇ ರಾಜ್ಯ ಸಮ್ಮೇಳನ ನಡೆದಿತ್ತು. ಆಗಿನ ಕಾಲಕ್ಕೂ ಈಗಿನ ಕಾಲಕ್ಕೂ ಸಾಕಷ್ಟು ಬದಲಾವಣೆಗಳಾಗಿವೆ. ಆಗ ವಿದ್ಯುನ್ಮಾನ ಮಾಧ್ಯಮಗಳು ಕಡಿಮೆ ಇದ್ದವು. ಈಗ ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಈಗ ಬಹು ಸಮ್ಮೇಳನ ಎಲ್ಲರನ್ನು ವಿಶ್ವಾಸ ತೆಗೆದುಕೊಂಡು ನಡೆಸಲಾಗುವುದು.‌ ವೃತ್ತಿ ಆಧಾರಿತ ಮೇಲೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಸಮ್ಮೇಳನ ಸಂಘಟಿಸಲಾಗುತ್ತಿದೆ.‌ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಶರಣಬಸವೇಶ್ವರರ ಮಹಾದಾಸೋಹಿ ಸಂಸ್ಥಾನದ ಪೀಠಾಧಿಪತಿ ಡಾ. ಶರಣಬಸವಪ್ಪ ಅಪ್ಪ ಅವರ ಸಾನ್ನಿಧ್ಯದಲ್ಲಿ ಸ್ವಾಗತ ಸಮಿತಿ ರಚಿಸಲಾಗುವುದು ಎಂದು ತಗಡೂರು ವಿವರಿಸಿದರು.

ADVERTISEMENT

ಕೋವಿಡ್ ಸೋಂಕು ಆತಂಕದ ಹಿನ್ನೆಲೆಯಲ್ಲಿ ಸಮ್ಮೇಳನ ಎರಡು ದಿನದ ಬದಲು ಒಂದು ದಿನ ಮಾತ್ರ ಆಯೋಜಿಸಲು ಉದ್ದೇಶಿಸಲಾಗಿದೆ. ಬೆಳಿಗ್ಗೆ ಉದ್ಘಾಟನೆ, ತದನಂತರ ಗೋಷ್ಠಿ, ಸಂಜೆ ಸಮಾರೋಪ ನಡೆಸಲು ಉದ್ದೇಶಿಸಲಾಗಿದೆ. ಮರು ದಿನ ಪ್ರವಾಸ ಆಯೋಜಿಸಲಾಗುವುದು. ಸಮ್ಮೇಳನ ಅಂಗವಾಗಿ ಅರ್ಥಪೂರ್ಣ ಲೇಖನಗಳನ್ನು ಒಳಗೊಂಡ ಸ್ಮರಣ ಸಂಚಿಕೆ ಹೊರಲಾಗುವುದು. ಒಟ್ಟಾರೆ ಸಮ್ಮೇಳನ ಯಶಸ್ವಿಗೆ ವಿವಿಧ ಸಮಿತಿಗಳನ್ನು ರಚಿಸಲಾಗುವುದು ಎಂದು ತಿಳಿಸಿದರು.

ಕೆಯುಡಬ್ಲ್ಯೂಜೆ ಪ್ರಶಸ್ತಿ: ಸಮ್ಮೇಳನ ಸಮಾರೋಪದಲ್ಲಿ ಸಂಘದಿಂದ 19 ವಾರ್ಷಿಕ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತಿದೆ. 2 ವರ್ಷಗಳಿಂದ ಸಂಘದಿಂದ ವಾರ್ಷಿಕ ಪ್ರಶಸ್ತಿ ನೀಡಿಲ್ಲ. ಈಗ ಕಲಬುರ್ಗಿ ಸಮ್ಮೇಳನದಲ್ಲಿ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಹೀಗಾಗಿ ಪತ್ರಕರ್ತರು ತಮ್ಮ ಸಾಮಾಜಿಕ ಪರಿಣಾಮದ ಜತೆಗೆ ಇತರ ವೈವಿಧ್ಯಮಯ ವಿಶೇಷ ವರದಿಗಳ ಪ್ರತಿಯನ್ನು ಒಳಗೊಂಡ ಅರ್ಜಿಯನ್ನು ಪತ್ರಕರ್ತರು ಇದೇ ಸೆ.30 ರೊಳಗೆ ಅರ್ಜಿ ಸಲ್ಲಿಸಬೇಕೆಂದು ತಿಳಿಸಿದರು.

ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಭವಾನಿಸಿಂಗ್ ಠಾಕೂರ್, ಪ್ರಧಾನ ಕಾರ್ಯದರ್ಶಿ ದೇವಿಂದ್ರಪ್ಪ ಅವಂಟಿ, ರಾಜ್ಯ ಸಮಿತಿ ಸದಸ್ಯರಾದ ಹಣಮಂತರಾವ ಭೈರಾಮಡಗಿ, ದೇವಿಂದ್ರಪ್ಪ ಕಪನೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.