ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಲ್ಲೂಕಿನ ಫರಹತಾಬಾದ್ ಗ್ರಾಮದ ಬಳಿ ಮಳೆಯಿಂದ ಹಾನಿಗೀಡಾದ ಬೆಳೆಯನ್ನು ವೀಕ್ಷಿಸಿದರು.
ರೈತ ಚನ್ನಬಸಪ್ಪ ಸಜ್ಜನ ಎಂಬುವವರ 27 ಎಕರೆ ಹೊಲವನ್ನು ಪರಿಶೀಲಿಸಿದ ಮುಖ್ಯಮಂತ್ರಿ ಅವರು ತೊಗರಿ ಬೆಳೆ ಹಾಳಾಗಿರುವುದನ್ನು ಗಮನಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಕೆಕೆಆರ್ ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಅವರು ಬೆಳೆ ನಷ್ಟದ ಬಗ್ಗೆ ಮುಖ್ಯಮಂತ್ರಿ ಅವರಿಗೆ ಮಾಹಿತಿ ನೀಡಿದರು.
ರೈತರೊಂದಿಗೆ ಚರ್ಚೆ ನಡೆಸಿದ ಸಿದ್ದರಾಮಯ್ಯ ಅವರು ಎಷ್ಟು ಎಕರೆಯಲ್ಲಿ ತೊಗರಿ ಬೆಳೆಯಲಾಗಿದೆ. ಇಳುವರಿ ಸ್ವಲ್ಪವಾದರೂ ಬರುವುದೇ ಎಂದು ಕೇಳಿದರು. ಬೆಳೆಗೆ ಪೋಷಣೆ ಒದಗಿಸಬೇಕಿದ್ದ ಕಾಂಡ ಕೊಳೆತು ಹೋಗಿದ್ದರಿಂದ ಯಾವುದೆ ತೊಗರಿ ಹೂ ಬಿಡುವುದಿಲ್ಲ. ಹೀಗಾಗಿ ಇಡೀ ಬೆಳೆ ನಾಶ ಮಾಡಿ ಬೇರೆ ಬೆಳೆ ಬಿತ್ತನೆ ಮಾಡಬೇಕಾಗುತ್ತದೆ ಎಂದು ರೈತರು ಹೇಳಿದರು.
ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಹಾನಿಯಾದ ಬೆಳೆಗಳ ಡ್ರೋನ್ ಚಿತ್ರವನ್ನು ಮುಖ್ಯಮಂತ್ರಿ ಅವರಿಗೆ ತೋರಿಸಿದ್ದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆದಷ್ಟು ಶೀಘ್ರವೇ ಬೆಳೆ ಹಾನಿ ವರದಿ ಪಡೆದು ಪರಿಹಾರ ವಿತರಣೆಯ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.