ಚಿತ್ತಾಪುರ: ‘ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭಯದಿಂದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ ಜಾಧವ ಅವರು ಕೋಲಿ ಸಮಾಜ ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಸುಳ್ಳು ಹೇಳಿ ಅಪಪ್ರಚಾರ ಮಾಡುತ್ತಿದ್ದಾರೆ’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಬಾಬುರಾವ ಚಿಂಚನಸೂರ ಆರೋಪಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಮತ್ತು ಕೋಲಿ ಸಮಾಜ ಎಸ್.ಟಿ ಕುರಿತು ಮಾತನಾಡಲು ಜಾಧವಗೆ ನೈತಿಕತೆಯೇ ಇಲ್ಲ. ಜಾಧವ ಅವರು ಜನರ ಯಾವ ಕೆಲಸ, ಕ್ಷೇತ್ರದ ಅಭಿವೃದ್ಧಿಯನ್ನೂ ಮಾಡಿಲ್ಲ. ಚುನಾವಣೆಯಲ್ಲಿ ಜಾಧವ ಅವರನ್ನು ಮನೆಗೆ ಕಳಿಸಲು ಜನರೇ ಸಿದ್ಧರಾಗಿದ್ದಾರೆ. ಸೋಲಿನ ಸುಳಿವು ಲಭಿಸಿದ್ದರಿಂದಲೇ ಖರ್ಗೆ ವಿರುದ್ಧ ಸುಳ್ಳು ಹೇಳಲು ಶುರು ಮಾಡಿದ್ದಾರೆ’ ಎಂದು ದೂರಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಮಂತ್ರಿ ಆಗುವ ಯೋಗ ಕೂಡಿಬಂದಿದೆ. ಮುಂಬರುವ ದಿನಗಳಲ್ಲಿ ಅವರಿಂದಲೇ ಕೋಲಿ ಸಮಾಜಕ್ಕೆ ಸಾಮಾಜಿಕ ನ್ಯಾಯ, ಎಸ್.ಟಿ ಸೌಲಭ್ಯ ದೊರೆಯಲಿದೆ’ ಎಂದು ಹೇಳಿದರು.
ಕೋಲಿ ಸಮಾಜದ ಹಿರಿಯ ಮುಖಂಡ ಭೀಮಣ್ಣ ಸಾಲಿ, ತಾಲ್ಲೂಕು ಕೋಲಿ ಸಮಾಜದ ಅಧ್ಯಕ್ಷ ರಾಮಲಿಂಗ ಬಾನರ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.