ಕಲಬುರ್ಗಿ: ಅಕ್ರಮವಾಗಿ ಎಂಟು ದನಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ವಾಹನವನ್ನು ತಡೆದು ಸ್ಟೇಶನ್ ಬಜಾರ್ ಠಾಣೆಗೆ ಒಪ್ಪಿಸಿದ್ದರೂ ಪೊಲೀಸ್ ಇನ್ಸ್ಪೆಕ್ಟರ್ ಲಾಲಸಾಬ್ ಗೌಂಡಿ ಅವರು ಅವರು ವಾಹನ ಹಾಗೂ ದನಗಳನ್ನು ಬಿಟ್ಟಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶ್ರೀರಾಮ ಸೇನಾ ರಾಜ್ಯ ಘಟಕದ ಅಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾನುವಾರ ನಗರಕ್ಕೆ ಬಂದಿದ್ದ ಕಾರಜೋಳ ಅವರನ್ನು ಭೇಟಿ ಮಾಡಿದ ಸ್ವಾಮೀಜಿ, ಗೌಂಡಿ ಅವರು ವಾಹನ ಜಪ್ತಿ ಮಾಡಿ ದನಗಳನ್ನು ಗೋಶಾಲೆಗೆ ಕಳುಹಿಸುವ ಬದಲು ವಾಹನ ಸಮೇತ ಕಸಾಯಿಖಾನೆಗೆ ಕಳಿಸಿದ್ದಾರೆ. ಆದ್ದರಿಂದ ಅವರನ್ನು ಅಮಾನತುಗೊಳಿಸಿ ಇಲಾಖೆ ತನಿಖೆಗೆ ಒಳಪಡಿಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇದೇ 17ರಂದು ನಗರದಲ್ಲಿ ಶ್ರೀರಾಮ ಸೇನಾ ಕಾರ್ಯಕರ್ತರು ಪ್ರತಿಭಟನೆಯನ್ನೂ ನಡೆಸಲಿದ್ದೇವೆ ಎಂದು ತಿಳಿಸಿದರು.
ದೂರನ್ನು ಆಲಿಸಿದ ಕಾರಜೋಳ ಅವರು ತಕ್ಷಣ ಪೊಲೀಸ್ ಕಮಿಷನರ್ ಸತೀಶಕುಮಾರ್ ಎನ್. ಅವರಿಗೆ ಕರೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಈ ಕುರಿತು ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಸತೀಶಕುಮಾರ್, ‘ಗೋವುಗಳನ್ನು ಸಾಗಿಸುತ್ತಿದ್ದ ವಾಹನದಲ್ಲಿದ್ದವರನ್ನು ಕರೆಸಿ ಮಾಹಿತಿ ಪಡೆದು ಸಮಗ್ರ ವರದಿ ನೀಡುವಂತೆ ಎಸಿಪಿ ವಿಜಯಕುಮಾರ್ ವಿ.ಎಚ್. ಅವರಿಗೆ ಸೂಚಿಸಿದ್ದೇನೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.