ಜೇವರ್ಗಿ: ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಕಳೆದ ಸೆಮಿಸ್ಟರ್ ಪರೀಕ್ಷೆಯನ್ನು ನಡೆಸುತ್ತೇವೆ ಎಂಬ ಅವೈಜ್ಞಾನಿಕ ಮತ್ತು ಅತಾರ್ಕಿಕವಾದ ನಿರ್ಧಾರವನ್ನು ಹಿಂಡೆಯಬೇಕು ಎಂದು ಒತ್ತಾಯಿಸಿ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ಸಂಬಂಧಪಟ್ಟವರ ಅಭಿಪ್ರಾಯವನ್ನು ಪಡೆಯದೇ ಏಕಪಕ್ಷೀಯವಾಗಿ ಹಾಗೂ ಅಪ್ರಜಾತಾಂತ್ರಿಕವಾಗಿ ನಿರ್ಧರ ತೆಗೆದುಕೊಳ್ಳುವುದನ್ನು ನಿಲ್ಲಿಸಬೇಕು. ವಿದ್ಯಾರ್ಥಿ ಸಮೂಹದ ಮೇಲೆ ವಿಪರೀತ ಹೊರೆ ಹೇರುವುದನ್ನು ನಿಲ್ಲಿಸಬೇಕು. ಆಫ್ ಲೈನ್ ತರಗತಿಗಳು ಆರಂಭವಾಗುವ ಮುನ್ನ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತವಾಗಿ ಲಸಿಕೆ ನೀಡಬೇಕು ಎಂದು ಆಗ್ರಹಿಸಿದರು.
ಒಂದು ತಿಂಗಳಲ್ಲಿ ಎರಡು ಸೆಮಿಸ್ಟರ್ಗಳ ಪರೀಕ್ಷೆ ಬರೆಯಲಾರೆವು ಎಂದು ವಿದ್ಯಾರ್ಥಿಗಳು ತಮ್ಮ ಆಕ್ರೋಶ ವ್ಯಕ್ತಪಡಿಸಿ ಪ್ರಾಂಶುಪಾಲರಿಗೆ ಮನವಿ ಪತ್ರ ಸಲ್ಲಿಸಿದರು. ಹಲವು ವಿದ್ಯಾರ್ಥಿಗಳು ತಮ್ಮ ಕುಟುಂಬದೊಂದಿಗೆ ಮನೆಯಲ್ಲಿಯೇ ಬೇಡಿಕೆಗಳ ಫಲಕ ಹಿಡಿದುಕೊಂಡು ಆನ್ ಲೈನ್ ಮುಖಾಂತರ ಪ್ರತಿಭಟಿಸಿದರು.
ಈ ಹೋರಾಟದಲ್ಲಿ ಜೇವರ್ಗಿ ತಾಲ್ಲೂಕು ಸಂಚಾಲಕ ಅರುಣ ಹಿರೆಬಾನುರ, ಜಿಲ್ಲಾ ಸಮಿತಿ ಸದಸ್ಯ ರಮೇಶ ದೇವಕರ್, ವಿದ್ಯಾರ್ಥಿಗಳಾದ ಶ್ರೀದೇವಿ, ಪ್ರವೀಣ್, ಚನ್ನಪ್ಪ, ನಾಗರಾಜ್, ಅಲಿಬಾಸ, ಸವಿತಾ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.