
'ಪ್ರಜಾವಾಣಿ' ವರದಿ
ಕಲಬುರಗಿ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ 29 ಸಾವಿರ ವಿದ್ಯಾರ್ಥಿಗಳು ಹೆಸರು ನೋಂದಾಯಿಸದ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.
ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಯಾದಗಿರಿ, ಕೊಪ್ಪಳ, ರಾಯಚೂರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ 29,060 ಮಕ್ಕಳು ಮಾರ್ಚ್ನಲ್ಲಿ ನಡೆಯಲಿರುವ ಪರೀಕ್ಷೆಗೆ ಹೆಸರು ನೋಂದಾಯಿಸಿಲ್ಲ ಎಂಬ ಬಗ್ಗೆ ‘ಪ್ರಜಾವಾಣಿ’ ಶುಕ್ರವಾರದ ಸಂಚಿಕೆಯಲ್ಲಿ ವಿಶೇಷ ವರದಿ ಪ್ರಕಟಿಸಿತ್ತು.
ವರದಿಯನ್ನು ಗಮನಿಸಿದ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಅವರು, ‘ಕಲಬುರಗಿ ಜಿಲ್ಲೆಯಲ್ಲಿ ಅತಿ ಹೆಚ್ಚು ಮಕ್ಕಳು ಪರೀಕ್ಷೆಗೆ ನೋಂದಾಯಿಸಿಕೊಂಡಿಲ್ಲ. ಇದರಿಂದ ಮಕ್ಕಳ ಶೈಕ್ಷಣಿಕ ಹಕ್ಕುಗಳು ಮೊಟಕುಗೊಳ್ಳುವುದಲ್ಲದೇ, ಮಕ್ಕಳು ಶಿಕ್ಷಣದಿಂದ ವಂಚಿತರಾದಂತಾಗುತ್ತದೆ. ಪರೀಕ್ಷೆಗೆ ಕೆಲವೇ ತಿಂಗಳು ಬಾಕಿ ಇದ್ದು, ಈ ಹಂತದಲ್ಲಿ ತಮ್ಮ ಊರುಗಳಿಂದಲೇ ಹೊರಗುಳಿದ ವಿದ್ಯಾರ್ಥಿಗಳ ಕುಟುಂಬಗಳನ್ನು ಮನವೊಲಿಸಿ ಕರೆತಂದು ಪರೀಕ್ಷೆಗೆ ನೋಂದಾಯಿಸುವ ಪ್ರಕ್ರಿಯೆ ತುರ್ತಾಗಿ ನಡೆಯಬೇಕಿದೆ. ಜಿಲ್ಲಾಡಳಿತವೂ ಈ ನಿಟ್ಟಿನಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು. ಹೆಸರು ನೋಂದಾಯಿಸಲು ಇಲಾಖೆ ಕೈಗೊಂಡ ಕ್ರಮ ಹಾಗೂ ಮುಂದುವರಿದ ಕ್ರಮಗಳ ಬಗ್ಗೆ ಮೂರು ದಿನಗಳ ಒಳಗಾಗಿ ಆಯೋಗಕ್ಕೆ ಮಾಹಿತಿ ನೀಡಬೇಕು’ ಎಂದು ಇಲಾಖೆಯ ಆಯುಕ್ತರಿಗೆ ಬರೆದ ಪತ್ರದಲ್ಲಿ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.