
ನವದೆಹಲಿ: ಕಲಬುರಗಿ ಜಿಲ್ಲೆಯ ಆಳಂದ ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿ ಮಹಾಶಿವರಾತ್ರಿ ಪೂಜೆ ನಡೆಸುವುದನ್ನು ತಡೆಯಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಬುಧವಾರ ಒಪ್ಪಿದೆ.
ಈ ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಅವರ ಪೀಠದ ಮುಂದೆ ತುರ್ತು ವಿಚಾರಣೆಗಾಗಿ ಉಲ್ಲೇಖಿಸಲಾಯಿತು.
ಫೆಬ್ರುವರಿ 15ರೊಳಗೆ ಅರ್ಜಿಯ ವಿಚಾರಣೆ ನಡೆಸಬೇಕು ಎಂದು ಅರ್ಜಿದಾರರ ಪರ ವಕೀಲೆ ವಿಭಾ ದತ್ತಾ ಮಖಿಜಾ ಮನವಿ ಮಾಡಿದರು. ಈ ಮನವಿಯನ್ನು ಪರಿಗಣಿಸುವುದಾಗಿ ಪೀಠ ಹೇಳಿತು.
ಸಂಬಂಧಪಟ್ಟ ಹೈಕೋರ್ಟ್ಗಳನ್ನು ಸಂಪರ್ಕಿಸದೆಯೇ ನೇರವಾಗಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸುವ ಪ್ರವೃತ್ತಿಗೆ ಪೀಠ ಕಳವಳ ವ್ಯಕ್ತಪಡಿಸಿತು. ‘ಸಂವಿಧಾನದ 32ನೇ ವಿಧಿಯಲ್ಲಿ ಎಲ್ಲವೂ ಏಕೆ ಬರುತ್ತಿದೆ? ಕಾನೂನು ಅನುಕೂಲಕರವಾಗಿರುವುದರಿಂದ ಅರ್ಜಿಗಳು ಸಲ್ಲಿಕೆಯಾಗುತ್ತಿವೆ ಮತ್ತು ಹೈಕೋರ್ಟ್ ನಿಷ್ಕ್ರಿಯವಾಗಿದೆ ಎಂಬ ಸಂದೇಶ ಹೋಗುತ್ತಿದೆ‘ ಎಂದು ಪೀಠ ಹೇಳಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.