ADVERTISEMENT

ಕಲಬುರ್ಗಿ: ವಿದ್ಯಾರ್ಥಿನಿ ಮೇಲೆ ಹಲ್ಲೆ ಪ್ರಕರಣ, ಶಿಕ್ಷಕರಿಗೆ ನೋಟಿಸ್

ಪ್ರಜಾವಾಣಿ ಫಲಶ್ರುತಿ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2021, 16:57 IST
Last Updated 6 ಅಕ್ಟೋಬರ್ 2021, 16:57 IST

ಕಲಬುರ್ಗಿ: ಕಾಳಗಿ ತಾಲ್ಲೂಕಿನ ರೇವಗ್ಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗಾಂಧಿ ಜಯಂತಿಯಂದು ಸ್ವಚ್ಛತಾ ಕಾರ್ಯ ಸರಿಯಾಗಿ ಮಾಡಿಲ್ಲ ಎಂದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಗೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಭಾರ ಪ್ರಾಚಾರ್ಯ ಮರೆಪ್ಪ ಸುರಪುರ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಮಲ್ಕಪ್ಪ ಬಿರಾದಾರಗೆ ಬಿಸಿಎಂ ಇಲಾಖೆಯ ಜಿಲ್ಲಾ ಅಧಿಕಾರಿ ರಮೇಶ ಸಂಗಾ ಅವರು ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದ್ದಾರೆ.

ಹಲ್ಲೆ ನಡೆಸಿದ ಕುರಿತು ಬುಧವಾರ ‘ಪ್ರಜಾವಾಣಿ’ ವರದಿ ಪ್ರಕಟಿಸಿತ್ತು. ಹೀಗಾಗಿ, ಸ್ಥಳಕ್ಕೆ ದೌಡಾಯಿಸಿದ ರಮೇಶ ಸಂಗಾ ಅವರು ಶಾಲೆಯ ಪ್ರಾಚಾರ್ಯರು ಹಾಗೂ ವಿದ್ಯಾರ್ಥಿನಿಗೆ ಥಳಿಸಿರುವ ಆರೋಪ ಎದುರಿಸುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕ ಮಲ್ಕಪ್ಪ ಬಿರಾದಾರ ಅವರನ್ನು ವಿಚಾರಣೆಗೊಳಪಡಿಸಿದರು. ಅಲ್ಲದೇ, ವಿದ್ಯಾರ್ಥಿನಿಯರಿಂದ ಮಾಹಿತಿ ಪಡೆದರು.

ಥಳಿತಕ್ಕೊಳಗಾದ ವಿದ್ಯಾರ್ಥಿನಿಯನ್ನು ಪೋಷಕರು ತಮ್ಮ ಊರಿಗೆ ಕರೆದುಕೊಂಡು ಹೋಗಿದ್ದರು. ಅವರ ಪೋಷಕರಿಗೆ ಕರೆ ಮಾಡಿ ಮಾಹಿತಿ ಪಡೆದರು. ಮುಂದೆ ಹೀಗಾಗದಂತೆ ಎಚ್ಚರ ವಹಿಸಲಾಗುವುದು. ಹೀಗಾಗಿ, ಶಾಲೆಗೆ ಮಗಳನ್ನು ತಂದು ಬಿಡುವಂತೆ ಮನವೊಲಿಸಿದರು. ಶಾಲೆಯಲ್ಲಿರುವ ವಿದ್ಯಾರ್ಥಿನಿಯರು ಮಲ್ಕಪ್ಪ ಅವರು ಹಲ್ಲೆ ನಡೆಸಿದ ಬಗ್ಗೆ ಮಾಹಿತಿ ನೀಡಿದರು.

ADVERTISEMENT

ವಿಚಾರಣೆ ಪೂರ್ಣಗೊಳಿಸಿದ ಬಳಿಕ ಸಂಗಾ ಇಬ್ಬರಿಗೂ ನೋಟಿಸ್ ಜಾರಿಗೊಳಿಸಿದರು. ಎರಡು ದಿನಗಳ ಒಳಗಾಗಿ ಸಮಜಾಯಿಷಿ ನೀಡುವಂತೆ ತಿಳಿಸಿದ್ದಾರೆ.

ಕರ್ತವ್ಯದಿಂದ ಬಿಡುಗಡೆಗೆ ಶಿಫಾರಸು: ವಿದ್ಯಾರ್ಥಿನಿಗೆ ಮಲ್ಕಪ್ಪ ಬಿರಾದಾರ ಥಳಿಸಿರುವುದು ದೃಢಪಟ್ಟಿದೆ. ಹೀಗಾಗಿ, ಅವರನ್ನು ಶಾಲೆಯ ಕರ್ತವ್ಯದಿಂದ ಬಿಡುಗಡೆಗೊಳಿಸಲು ಕೇಂದ್ರ ಕಚೇರಿಗೆ ಶಿಫಾರಸು ಮಾಡಲಾಗುವುದು ಎಂದು ಕ್ರೈಸ್ ಜಿಲ್ಲಾ ಸಂಯೋಜಕ ಶಿವರಾಮ ಚವ್ಹಾಣ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.