ADVERTISEMENT

ಮುಖ್ಯಮಂತ್ರಿ ಪ್ರತಿಕೃತಿ ದಹನಕ್ಕೆ ಯತ್ನ; 35 ಕಾರ್ಯಕರ್ತರು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2020, 8:11 IST
Last Updated 5 ಡಿಸೆಂಬರ್ 2020, 8:11 IST
ಕಲಬುರ್ಗಿಯಲ್ಲಿ ಶನಿವಾರ ಕನ್ನಡಿಗರ ಸೈನ್ಯ ಸಂಘಟನೆ ಕಾರ್ಯಕರ್ತರು ನಾಯಿಗೆ ಯಡಿಯೂರಪ್ಪ ಅವರ ಭಾವಚಿತ್ರ ಹಾಕಿ ಆಕ್ರೋಶ ಹೊರಹಾಕಿದರು.
ಕಲಬುರ್ಗಿಯಲ್ಲಿ ಶನಿವಾರ ಕನ್ನಡಿಗರ ಸೈನ್ಯ ಸಂಘಟನೆ ಕಾರ್ಯಕರ್ತರು ನಾಯಿಗೆ ಯಡಿಯೂರಪ್ಪ ಅವರ ಭಾವಚಿತ್ರ ಹಾಕಿ ಆಕ್ರೋಶ ಹೊರಹಾಕಿದರು.   

ಕಲಬುರ್ಗಿ: ರಾಜ್ಯ ಸರ್ಕಾರದ ಮರಾಠಾ ಅಭಿವೃದ್ಧಿ ನಿಗಮ ಘೋಷಣೆ ವಿರೋಧಿಸಿ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಪರ ಸಂಘಟನೆಗಳ 35 ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಕಲ್ಯಾಣ ಕರ್ನಾಟಕ ಕನ್ನಡ ಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ
ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ರಸ್ತೆ ತಡೆ ನಡೆಸಿ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಧಿಕ್ಕಾರ ಕೂಗಿದರು.

ಸರ್ಕಾರ ಮತ್ತು ಸಿ.ಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು, ರಸ್ತೆಯಲ್ಲೇ ಊರುಳು ಸೇವೆ ನಡೆಸಿ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಈ ವೇಳೆ ಪೊಲೀಸರು 15ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

ನಂತರದಲ್ಲಿ ಮತ್ತೊಂದು ತಂಡದಲ್ಲಿ ಬಂದ 20 ಕರವೇ (ನಾರಾಯಣ ಗೌಡ ಬಣ) ಪ್ರತಿಭಟನಾಕಾರನ್ನೂ ಪೊಲೀಸರು ವಶಕ್ಕೆ ತೆಗೆದುಕೊಂಡರು.

ಬಂದ್ ನೀರಸ: ಕನ್ನಡ ಪರ ಸಂಘಟನೆಗಳ ಪ್ರತಿಭಟನೆ ಹೊರತುಪಡಿಸಿ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸಾರಿಗೆ ಬಸ್, ಆಟೊ, ಖಾಸಗಿ ವಾಹನಗಳ ಸಂಚಾರ ಎಂದಿನಂತೆ ಇದೆ. ಅಂಗಡಿ, ಮುಂಗಟ್ಟುಗಳ ಸಹ ಆರಂಭವಾಗಿವೆ. ಜನವಜೀವನ ಸಹಜವಾಗಿದೆ. ಬಸ್ ನಿಲ್ದಾಣ, ರಾಮ ಮಂದಿರ, ಗಂಜ್ ಇತರೆಡೆಗಳಲ್ಲಿ ಎಂದಿನಂತೆ ವ್ಯಾಪಾರ‌ ವಹಿವಾಟು ನಡೆದಿದೆ. ಮುನ್ನೆಚ್ಚರಿಕೆ ಕ್ರಮವಾಗಿ 1500 ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ.

ನಾಯಿಗಳಿಗೆ ಯಡಿಯೂರಪ್ಪ, ಯತ್ನಾಳ್ ಭಾವಚಿತ್ರ: ಇಲ್ಲಿನ ಕನ್ನಡಿಗರ ಸೈನ್ಯದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಆಕ್ರೋಶ ವ್ಯಕ್ತಪಡಿಸಿದರು.

ಬಿ.ಎಸ್.ಯಡಿಯೂರಪ್ಪ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಭಾವಚಿತ್ರಗಳನ್ನು ಎರಡು ನಾಯಿಗಳ ಮುಖಕ್ಕೆ ಕಟ್ಟಿ ಮೆರವಣಿಗೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.