ಕಲಬುರ್ಗಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಸಬಲೀಕರಣಕ್ಕಾಗಿ ಜಾರಿಯಾಗಿರುಂವ ಉದ್ಯಮಶೀಲತಾ ಯೋಜನೆಯ ಸಹಾಯಧನ ವನ್ನು ₹ 5 ಲಕ್ಷದಿಂದ ₹ 1 ಲಕ್ಷಕ್ಕೆ ಇಳಿಕೆ ಮಾಡಿರುವುದನ್ನು ಸದನದಲ್ಲಿ ಪ್ರಶ್ನಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಕಾರ್ಯಕರ್ತರು ಕಲಬುರ್ಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಅವರ ಮನೆ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಅಭಿವೃದ್ದಿ ನಿಗಮಗಳಿಂದ ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ, ಸ್ವಯಂ ಉದ್ಯೋಗ ಯೋಜನೆ, ನೇರಸಾಲ ಯೋಜನೆ, ಉದ್ಯಮಶೀಲತಾ ಯೋಜನೆ, ಮೈಕ್ರೊ ಕ್ರೆಡಿಟ್ ಯೋಜನೆಗಳ ಮೂಲಕ ನಿರುದ್ಯೋಗಿಗಳಿಗೆ ಅನುಕೂಲವಾಗಿ ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳಲು ನೀಡಲಾಗುತ್ತಿರುವ ₹ 5 ಲಕ್ಷ ಹಾಗೂ ₹ 3.5 ಲಕ್ಷ ಮೊತ್ತದ ಸಹಾಯಧನವನ್ನು ₹ 1 ಲಕ್ಷಕ್ಕೆ ಇಳಿಸಿರುವ ರಾಜ್ಯ ಸರ್ಕಾರದ ನಿರ್ಧಾರ ದಲಿತರ ಅಭಿವೃದ್ಧಿಗೆ ಕಂಟಕವಾಗಿದೆ ಎಂದು ಸಮಿತಿ ಸಂಚಾಲಕ ಅರ್ಜುನ ಭದ್ರೆ ಅಸಮಾಧಾನ ವ್ಯಕ್ತಪಡಿಸಿದರು.
ಈ ಮೊದಲಿದ್ದ ಸಬ್ಸಿಡಿ ಪದ್ಧತಿ ಮುಂದುವರಿಸಬೇಕು. ಇಲ್ಲದಿದ್ದರೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸರ್ಕಾರದ ವಿರುದ್ಧ ಪ್ರಬಲ ಹೋರಾಟ ಮಾಡಬೇಕಾಗುತ್ತದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.