ಕಲಬುರ್ಗಿ: ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಅತಿವೃಷ್ಟಿ ಸಂಭವಿಸಿದ ಕಲಬುರ್ಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ತಕ್ಷಣ ಪರಿಹಾರವಾಗಿ ₹ 50 ಸಾವಿರ ಕೋಟಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಸಂಸ್ಥಾಪಕ ವಾಟಾಳ್ ನಾಗರಾಜ್ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರವಾಹದಿಂದಾಗಿ ಭಾರಿ ಪ್ರಮಾಣದ ಹಾನಿಯಾಗಿದ್ದರೂ ಸರ್ಕಾರ ಕೈಕೊಟ್ಟು ಕುಳಿತಿದ್ದು, ಪರಿಹಾರ ನೀಡುವ ಮಾತನ್ನು ಆಡುತ್ತಿಲ್ಲ. ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಬಗ್ಗೆ ಈ ನಿರ್ಲಕ್ಷ್ಯ ಸಲ್ಲದು. ತೀವ್ರ ಸ್ವರೂಪದ ನಷ್ಟವಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿಲ್ಲ. ಕೂಡಲೇ ಪ್ರವಾಹ ಪರಿಸ್ಥಿತಿ ವೀಕ್ಷಿಸಲು ರಾಜ್ಯಕ್ಕೆ ಬರಬೇಕು. ಕೇಂದ್ರದಿಂದ ಹೆಚ್ಚಿನ ಪ್ರಮಾಣದ ನೆರವು ಘೋಷಿಸಬೇಕು ಎಂದು ಒತ್ತಾಯಿಸಿದರು.
ಕನ್ನಡಪರ ಸಂಘಟನೆಗಳ ಮುಖಂಡರಾದ ಮಂಜುನಾಥ ನಾಲವಾರಕರ, ಸಚಿನ್ ಫರಹತಾಬಾದ್, ರವಿ ದೇಗಾಂವ ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.