ಕಲಬುರಗಿ: ನಗರದ ಜ್ಞಾನಜ್ಯೋತಿ ಕರಿಯರ್ ಅಕಾಡೆಮಿ, ನವ್ಯಜ್ಯೋತಿ ಇಂಗ್ಲಿಷ್ ಮಾಧ್ಯಮ ಪ್ರಾಥಮಿಕ ಶಾಲೆಯಿಂದ ಇದೇ 18ರಂದು ಬೆಳಿಗ್ಗೆ 10.30ಕ್ಕೆ ಬಸವತೀರ್ಥ ನಗರದ ಜ್ಞಾನಜ್ಯೋತಿ ಕರಿಯರ್ ಅಕಾಡೆಮಿ ಆವರಣದಲ್ಲಿ ಸ್ವಾಮಿ ವಿವೇಕಾನಂದರ ಪುತ್ಥಳಿ ಅನಾವರಣ ಸಮಾರಂಭ ಹಮ್ಮಿಕೊಳ್ಳಾಗಿದೆ ಎಂದು ಅಕಾಡೆಮಿ ಸಂಸ್ಥಾಪಕ ಎನ್.ಎಸ್.ಹಿರೇಮಠ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಶ್ರೀನಿವಾಸ ಸರಡಗಿಯ ಚಿಕ್ಕ ವೀರೇಶ್ವರ ಸಂಸ್ಥಾನ ಹಿರೇಮಠದ ಡಾ.ರೇವಣಸಿದ್ಧ ಶಿವಾಚಾರ್ಯರು ಸಾನ್ನಿಧ್ಯ ವಹಿಸಲಿದ್ದು, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಅಧ್ಯಕ್ಷ ದತ್ತಾತ್ರೇಯ ಸಿ.ಪಾಟೀಲ ರೇವೂರ ಪುತ್ಥಳಿ ಅನಾವರಣ ಮಾಡಲಿದ್ದಾರೆ’ ಎಂದರು.
ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾಘನ್ ಧಾರವಾಡಕರ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ್, ಎಪಿಎಂಸಿ ಮಾಜಿ ಅಧ್ಯಕ್ಷ ಅಪ್ಪು ಕಣಕಿ, ಪಾಲಿಕೆ ಮಾಜಿ ಸದಸ್ಯರಾದ ಅರ್ಚನಾ ಪಾಟೀಲ, ಪ್ರಭು ಹಾದಿಮನಿ, ವಕೀಲ ಈರಣ್ಣಗೌಡ ಪೊಲೀಸ್ ಪಾಟೀಲ, ಸಂಕ್ರೆಪ್ಪಗೌಡ ಪಾಟೀಲ ಪಾಲ್ಗೊಳ್ಳಲಿದ್ದಾರೆ’ ಎಂದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ ಮಾತನಾಡಿ, ‘ಯುವಜನ ಸೇವಾ ಇಲಾಖೆಯು ರಾಷ್ಟ್ರೀಯ ಯುವ ಸಪ್ತಾಹವನ್ನು ಆಯೋಜಿಸಿ ಏಳು ಕಡೆಗಳಲ್ಲಿ ಸ್ವಾಮಿ ವಿವೇಕಾನಂದರ ಬಗ್ಗೆ ಉಪನ್ಯಾಸವನ್ನು ಏರ್ಪಡಿಸಬೇಕಿತ್ತು. ಇದಕ್ಕಾಗಿ ₹ 50 ಸಾವಿರ ಅನುದಾನವಿತ್ತು. ಇಲಾಖೆಯು ಈ ಬಾರಿ ಕೋವಿಡ್ ನೆಪ ನೀಡಿ ಅದನ್ನು ಸ್ಥಗಿತಗೊಳಿಸಿದೆ. ಜಿಲ್ಲಾಧಿಕಾರಿ ಅವರು ಮಧ್ಯಪ್ರವೇಶಿಸಿ ಉಪನ್ಯಾಸ ಆಯೋಜಿಸುವಂತೆ ಸೂಚಿಸಬೇಕು’ ಎಂದು ಹೇಳಿದರು.
ಶಿವು ಸ್ವಾಮಿ, ಈರಣ್ಣಗೌಡ ಪೊಲೀಸ್ ಪಾಟೀಲ ಇತರರು ಗೋಷ್ಠಿಯಲ್ಲಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.