
ವಾಡಿ: ಚಿತ್ತಾಪುರ ತಾಲ್ಲೂಕಿನ ನಾಲವಾರದ ಕೋರಿಸಿದ್ಧೇಶ್ವರ ಸಂಸ್ಥಾನ ಮಠದ ಭವ್ಯ ರಥೋತ್ಸವ ಸೋಮವಾರ ಸಹಸ್ರಾರು ಭಕ್ತರ ಮಧ್ಯೆ ಸಂಭ್ರಮ, ಸಡಗರದಿಂದ ಜರುಗಿತು.
ರಥೋತ್ಸವ ಹಿನ್ನೆಲೆ ಬೆಳಗ್ಗೆಯಿಂದ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಕೋರಿಸಿದ್ಧೇಶ್ವರರ ಗದ್ದುಗೆಗೆ ವಿಶೇಷ ಪೂಜೆ, ಮಹಾ ಮಂಗಳಾರತಿ, ಕ್ಷೀರಾಭಿಷೇಕ, ಗಂಧಾಭಿಷೇಕ, ಸಹಸ್ರ ಬಿಲ್ವಾರ್ಚನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿತು.
ರಾಜ್ಯ, ಹೊರ ರಾಜ್ಯಗಳಿಂದ ಅಪಾರ ಸಂಖ್ಯೆಯಲ್ಲಿ ಬಂದ ಕೋರಿಸಿದ್ದೇಶ್ವರ ದೇವರ ಹಾಗೂ ಸಿದ್ಧತೋಟೇಂದ್ರ ಶಿವಾಚಾರ್ಯರ ದರ್ಶನ ಪಡೆದರು.
ಮಠದ ಆವರಣದಲ್ಲಿ ವಿವಿಧ ಪುಷ್ಪಗಳಿಂದ ಅಲಂಕೃತಗೊಳಿಸಲಾಗಿತ್ತು. ರಥಕ್ಕೆ ರಾತ್ರಿ ಸಾಂಪ್ರದಾಯಿಕ ಪದ್ಧತಿಯಂತೆ ಸಿದ್ಧತೋಟೇಂದ್ರ ಸ್ವಾಮೀಜಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ರಥ ಚಲಿಸುತ್ತಿದ್ದಂತೆ ಕೋರಿಸಿದ್ದೇಶ್ವರ ಮಹಾರಾಜಕೀ ಜೈ... ಎಂಬ ಘೋಷಣೆ ಮೊಳಗಿಸುತ್ತ, ಭಕ್ತರು ಬಾಳೆಹಣ್ಣು, ಹೂವುಗಳನ್ನು ರಥದತ್ತ ಎಸೆದು ಭಕ್ತಿ ಸಮರ್ಪಿಸಿದರು.
ರಥೋತ್ಸವಕ್ಕೂ ಮುನ್ನ ಮದ್ದುಗಳು ಸುಡುವ ಕಾರ್ಯಕ್ರಮ ನೆರವೇರಿತು. ಬಾನಂಗಳದಲ್ಲಿ ಸಿಡಿಮದ್ದುಗಳು ಮೂಡಿಸಿದ ಬಣ್ಣ ಬಣ್ಣದ ಚಿತ್ತಾರ ಗಮನಸೆಳೆಯಿತು.
ಶಹಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ ಹಾಗೂ ವಾಡಿ ಪಿಎಸ್ಐ ತಿರುಮಲೇಶ.ಕೆ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಮಠದ ಆವರಣದಲ್ಲಿ ನಂದಿಕೋಲು ಕುಣಿತ, ಡೊಳ್ಳಿನ ಕುಣಿತಗಳು ಜರುಗಿದವು. ಕಲಾ ತಂಡಗಳು ರಥೋತ್ಸವಕ್ಕೆ ಮೆರಗು ನೀಡಿದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.