ಕಲಬುರ್ಗಿ:ಪ್ರಸ್ತುತ ಆರ್ಥಿಕ ವರ್ಷ ಮುಗಿಯಲು ಕೆಲವೇ ದಿನಗಳು ಬಾಕಿಯಿದೆ. ಆದರೂ, ಶಾಸಕರ ಹಾಗೂ ವಿಧಾನಪರಿಷತ್ ಸದಸ್ಯರ ಕ್ಷೇತ್ರಗಳ ಅಭಿವೃದ್ಧಿಗೆ ಶಾಸಕರ ನಿಧಿ ಬಿಡುಗಡೆ ಮಾಡದಿರುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದೆ. ಸರ್ಕಾರ ಆರ್ಥಿಕ ಪರಿಸ್ಥಿತಿ ಕುರಿತು ಕೂಡಲೇ ಶ್ವೇತಪತ್ರ ಹೊರಡಿಸಬೇಕು ಎಂದು ಶಾಸಕ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಪ್ರಿಯಾಂಕ್, ‘ಬಿಜೆಪಿ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ ಹಿಂದಿನ ಸರ್ಕಾರ ಬಿಡುಗಡೆ ಮಾಡಿದ್ದ ಅನುದಾನವನ್ನು ತಡೆ ಹಿಡಿಯಿತು. ಈಗ ಶಾಸಕರ ನಿಧಿಯನ್ನೂ ಬಿಡುಗಡೆ ಮಾಡದೇ ರಾಜ್ಯದ ಅಭಿವೃದ್ಧಿಗೆ ಬ್ರೇಕ್ ಹಾಕಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಪ್ರತಿ ಶಾಸಕರ ನಿಧಿಗೆ ವಾರ್ಷಿಕ ₹ 2 ಕೋಟಿ ನಿಗದಿಯಾಗಿದೆ. ಈ ಅನುದಾನದಲ್ಲಿ ಆಯಾ ಕ್ಷೇತ್ರಗಳಲ್ಲಿ ರಸ್ತೆ, ಕಾಮಗಾರಿ, ಕುಡಿಯುವ ನೀರು, ಶಾಲೆ–ಅಂಗನವಾಡಿ–ಕಾಲೇಜುಗಳ ನಿರ್ಮಾಣ ಹಾಗೂ ದುರಸ್ತಿ, ಸಮುದಾಯ ಭವನಗಳ ನಿರ್ಮಾಣ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ರಾಜ್ಯದ ಶಾಸಕರಿಗೆ ಈ ನಿಧಿ ಬಳಕೆಯಾಗುತ್ತಿತ್ತು. ಆದರೆ, ಬಿಜೆಪಿ ಸರ್ಕಾರ ₹ 2 ಕೋಟಿಗೆ ಬದಲು ಕೇವಲ ₹ 50 ಲಕ್ಷ ಬಿಡುಗಡೆ ಮಾಡಿರುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿದೆ’ ಎಂದು ಟೀಕಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.