ADVERTISEMENT

ನಮ್ಮ ಅಭ್ಯರ್ಥಿ ಆಯ್ಕೆ ಪ್ರಶ್ನಿಸಲು ಸಿದ್ದರಾಮಯ್ಯ ಯಾರು?: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2021, 8:33 IST
Last Updated 7 ಅಕ್ಟೋಬರ್ 2021, 8:33 IST
ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ
ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ    

ಕಲಬುರ್ಗಿ: ‘ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದು ನಮ್ಮ ಪಕ್ಷದ ನಿರ್ಧಾರ. ಅದನ್ನು ಪ್ರಶ್ನಿಸಲು ಸಿದ್ದರಾಮಯ್ಯ ಯಾರು?’ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕಎಚ್‌.ಡಿ. ಕುಮಾರಸ್ವಾಮಿ ಹರಿಹಾಯ್ದರು.

ನಗರದ ವಿಮಾನ ನಿಲ್ದಾಣದಿಂದ ಸಿಂದಗಿಗೆ ತೆರಳುವ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾರಿಗೆ ಟಿಕೆಟ್‌ ಕೊಡಬೇಕು. ಯಾರಿಗೆ ಕೊಡಬಾರದು ಎಂಬುದನ್ನು ಕೇಳುವ ಹಕ್ಕು ಸಿದ್ದರಾಮಯ್ಯ ಅವರಿಗೆ ಇಲ್ಲ. ಅವರು ಯಾವ ಸೀಮೆಯ ದೊಣ್ಣೆನಾಯಕ ಎಂದು ನಮ್ಮ ಪಕ್ಷದ ವಿಚಾರದಲ್ಲಿ ತಲೆ ಹಾಕುತ್ತಾರೆ’ ಎಂದು ಪ್ರಶ್ನಿಸಿದರು.

‘ಸಿಂದಗಿ ಹಾಗೂ ಹಾವೇರಿ ಜಿಲ್ಲೆಯ ಹಾನಗಲ್‌ನಲ್ಲಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದವರು ಉತ್ತಮ ವಿದ್ಯಾಭ್ಯಾಸ ಪಡೆದಿದ್ದಾರೆ. ಅವರನ್ನು ರಾಜಕಾರಣಕ್ಕೆ ತಂದರೆ ಸಮಾಜಕ್ಕೆ ಒಳಿತಾಗುತ್ತದೆ. ಹೀಗಾಗಿ, ಟಿಕೆಟ್‌ ನೀಡಲಾಗಿದೆ. ಇದರಲ್ಲಿ ಬಿಜೆಪಿಗೆ ಅನುಕೂಲ ಮಾಡಿಕೊಡುವ ಉದ್ದೇಶ ಇಲ್ಲ. ಜೆಡಿಎಸ್‌ ಸ್ವತಂತ್ರವಾಗಿ ರಾಜಕಾರಣ ನಡೆಸುತ್ತದೆಯೇ ಹೊರತು ಯಾವುದೇ ಪಕ್ಷದ ಬಿ ಟೀಮ್ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ADVERTISEMENT

‘ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಜೆಡಿಎಸ್‌ ಕಾರಣ ಅಲ್ಲ. ಬದಲಾಗಿ, ಕಾಂಗ್ರೆಸ್ಸೇ ಕಾರಣವಾಗಿದೆ. 105 ಸೀಟುಗಳನ್ನು ಗೆದ್ದಿದ್ದ ಬಿಜೆಪಿ ಅಧಿಕಾರಕ್ಕೆ ಬರಲು ಯಾವ ಪಕ್ಷದಿಂದ ಶಾಸಕರು ಸಹಕಾರ ನೀಡಿದರೆ ಎಂಬುದನ್ನು ನೋಡಿದರೆ ಎಲ್ಲವೂ ಗೊತ್ತಾಗುತ್ತದೆ’ ಎಂದರು.

‘ಹಿಂದಿನ ಆರ್‌ಎಸ್‌ಎಸ್‌ಗೂ ಈಗ ಇರುವ ಆರ್‌ಎಸ್‌ಎಸ್‌ ಸಂಘಟನೆಗೂ ಬಹಳ ವ್ಯತ್ಯಾಸವಿದೆ. ಇಂದು ಧರ್ಮದ ಆಧಾರಿತವಾಗಿ ಜನರನ್ನು ಒಡೆಯುವ, ಕೋಮು ಗಲಭೆ ಎಬ್ಬಿಸುವ ಕೆಲಸವನ್ನು ಮಾಡುತ್ತಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್‌ ಸದಸ್ಯರು ಯಾವ ಪಕ್ಷಕ್ಕೆ ಬೆಂಬಲ ನೀಡಬೇಕು ಎಂಬ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಈ ಸಂದರ್ಭದಲ್ಲಿ ಜಾತ್ಯತೀತತೆ, ಕೋಮುವಾದ ವಿಚಾರಗಳು ಪರಿಗಣನೆಗೆ ಬರುವುದಿಲ್ಲ. ಕಲಬುರ್ಗಿಯ ಹಲವು ಬಡಾವಣೆಗಳಲ್ಲಿ ಇಂದಿಗೂ ಜನರು ನಾಯಿಗಿಂತ ಕಡೆಯದಾದ ಜೀವನವನ್ನು ನಡೆಸುತ್ತಿದ್ದಾರೆ. ಅವರ ಜೀವನ ಮಟ್ಟವನ್ನು ಸುಧಾರಿಸಲು ಯಾವ ಪಕ್ಷ ಪ್ರಯತ್ನಿಸುತ್ತದೋ ಅಂಥವರಿಗೆ ಬೆಂಬಲ ನೀಡುತ್ತೇವೆ ಎಂದರು.

ಶಾಸಕ ಬಂಡೆಪ್ಪ ಕಾಶೆಂಪೂರ, ಜೆಡಿಎಸ್‌ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಶಾಮರಾವ್ ಸೂರನ್, ಮುಖಂಡರಾದ ಕೃಷ್ಣಾರೆಡ್ಡಿ, ಶಿವಕುಮಾರ ನಾಟೀಕಾರ, ಮಹೇಶ್ವರಿ ವಾಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.