ಕಲಬುರಗಿ: ‘ಈ ಬಾರಿ ಹೊಸಬರಿಗೆ ಅವಕಾಶ ಕೊಡಬೇಕು ಎಂದು ಮತದಾರರು ನಿರ್ಧರಿಸಿದ್ದರು ಎಂದು ಕಾಣುತ್ತದೆ. ಜಿದ್ದಾಜಿದ್ದಿನಿಂದ ಕೂಡಿದ ಚುನಾವಣೆಯಲ್ಲಿ ವಿಜಯಕುಮಾರ ತೆಗಲತಿಪ್ಪಿ ಗೆಲುವು ಸಾಧಿಸಿದ್ದಾರೆ. ಮುಂದಿನ ದಿನಗಳಲ್ಲಿ ಪರಿಷತ್ತಿನ ಚಟುವಟಿಕೆಗಳಿಗೆ ಅವರಿಗೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆ’ ಎಂದು ಎಂದು ಕಸಾಪ ಜಿಲ್ಲಾ ಘಟಕದ ನಿಕಟಪೂರ್ವ ಅಧ್ಯಕ್ಷ ವೀರಭದ್ರ ಸಿಂಪಿ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚುನಾವಣೆಯಲ್ಲಿ ಸೋತಿದ್ದಕ್ಕೆ ಬೇಸರವಿಲ್ಲ. ಮುಂಬರುವ ದಿನಗಳಲ್ಲಿ ಸಾಹಿತ್ಯಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತೇನೆ ಎಂದರು.
‘12 ವರ್ಷಗಳ ಕಾಲ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನ ನಿರ್ವಹಿಸಿದ್ದೇನೆ. ಈ ಸಮಯದಲ್ಲಿ ಮಾಡಿದ ಕನ್ನಡಪರ ಕೆಲಸಗಳು ನನಗೆ ತೃಪ್ತಿ ನೀಡಿದೆ. ಪರಿಷತ್ತಿನ ಚಟುವಟಿಕೆಗಳನ್ನು ಜನಸಾಮಾನ್ಯರಿಗೂ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ’ ಎಂದರು.
‘ನನಗೆ ಅವಕಾಶ ನೀಡಿದ ಕಸಾಪ ಸದಸ್ಯರಿಗೆ ಚಿರಋಣಿ. ಜಿಲ್ಲೆಯ ಜನರ ಆಶಯದಂತೆ ಕಲಬುರಗಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ಶ್ರಮಿಸಿದ್ದೇನೆ. ಅನುದಾನದ ಕೊರತೆ ನಡುವೆಯೂ ನನ್ನ ಅವಧಿಯಲ್ಲಿ ನಡೆದ ಸಾಹಿತ್ಯ ಸಮ್ಮೇಳನ, ಪುಸ್ತಕ ಪ್ರಕಟಣೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಜನರ ಸಹಾಯ, ಸಹಕಾರದಿಂದ ಕನ್ನಡ ಭವನ ನಿರ್ಮಿಸಿ, ಇಲ್ಲಿ ಹಲವಾರು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿದ ತೃಪ್ತಿ ನನಗಿದೆ’ ಎಂದರು.
ಪ್ರಮುಖರಾದ ಮಡಿವಾಳಪ್ಪ ನಾಗನಳ್ಳಿ, ರಮೇಶ ಕಡಾಳೆ, ಆನಂದ ನಂದೂರಕರ್, ಅಣವೀರ ಹಂಡಿಗೆ, ದೌಲತರಾವ್ ಮಾಲಿಪಾಟೀಲ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.