ADVERTISEMENT

ಕಟ್ಟಡ ಕಾರ್ಮಿಕರ ಪರಿಹಾರ ಮೊತ್ತ ಹೆಚ್ಚಿಸಿ

ತಲಾ ₹ 10 ಸಾವಿರದಂತೆ ಮೂರು ತಿಂಗಳ ಪರಿಹಾರ ನೀಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 3 ಜುಲೈ 2021, 2:15 IST
Last Updated 3 ಜುಲೈ 2021, 2:15 IST
ಕಟ್ಟಡ ಕಾರ್ಮಿಕರಿಗೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದ ಕಾರ್ಯಕರ್ತರು ಕಲಬುರ್ಗಿ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು
ಕಟ್ಟಡ ಕಾರ್ಮಿಕರಿಗೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದ ಕಾರ್ಯಕರ್ತರು ಕಲಬುರ್ಗಿ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು   

ಕಲಬುರ್ಗಿ: ಕೋವಿಡ್‌ ಲಾಕ್‌ಡೌನ್‌ದಿಂದ ಸಂಕಷ್ಟಕ್ಕೆ ಸಿಲುಕಿದ ರಾಜ್ಯದ ಕಟ್ಟಡ ಕಾರ್ಮಿಕರಿಗೆ ಪ್ರತಿ ತಿಂಗಳು ₹ 10 ಸಾವಿರದಂತೆ ಮೂರು ತಿಂಗಳು ಪರಿಹಾರಧನ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಕೊರೊನಾ ಲಾಕ್‌ಡೌನ್ ಕಾರಣ ರಾಜ್ಯದ ಕಟ್ಟಡ ಕಾರ್ಮಿಕರ ಬದುಕು ಬೀದಿಗೆ ಬಿದ್ದಂತಾಗಿದೆ. ದುಡಿಯುವ ಕೈಗಳಿಗೆ ಕೆಲಸವಿಲ್ಲ, ಹೊಟ್ಟೆತುಂಬ ಅನ್ನವಿಲ್ಲದ ಸ್ಥಿತಿ ಬಂದಿದೆ. ಕುಟುಂಬ ನಿರ್ವಹಣೆ ಸವಾಲಾಗಿ ಪರಿಣಮಿಸಿದೆ. ಈ ಸಂಕಷ್ಟದಿಂದ ಪಾರು ಮಾಡಲು ಸರ್ಕಾರ ತಕ್ಷಣ ಪರಿಹಾರ ಘೋಷಿಸಬೇಕು ಎಂದೂ
ಆಗ್ರಹಿಸಿದರು.

ಸದ್ಯ ರಾಜ್ಯ ಸರ್ಕಾರ ಕಟ್ಟಡ ಕಾರ್ಮಿಕರಿಗೆ ₹ 3 ಸಾವಿರ ಪರಿಹಾರಧನ ಘೋಷಿಸಿದೆ. ಅದನ್ನಾದರೂ ತಕ್ಷಣ ಅವರ ಖಾತೆಗೆ ಜಮಾ ಮಾಡಬೇಕು. ಕುಟುಂಬಗಳಿಗೆ ದಿನಸಿ ಕಿಟ್ ನೀಡಬೇಕು ಎಂದೂ
ಆಗ್ರಹಿಸಿದರು.

ADVERTISEMENT

ಕಾರ್ಮಿಕರಿಗೆ ಆಹಾರ ಪದಾರ್ಥ ಕಿಟ್ ಖರೀದಿಯಲ್ಲಿ ಅವ್ಯವಹಾರ ನಡೆದಿರುವ ದೂರು ಇದ್ದು, ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ಎಲ್ಲಾ ವಿದ್ಯಾರ್ಥಿಗಳಿಗೂ ಎರಡು ಡೋಸ್‌ ಲಸಿಕೆ ನೀಡುವವರೆಗೂ ತರಗತಿ ಆರಂಭಿಸಬಾರದು. ಯಾವುದೇ ಪರೀಕ್ಷೆಯನ್ನೂ ನಡೆಸಬಾರದು ಎಂದೂ ಮನವಿಯಲ್ಲಿ
ಆಗ್ರಹಿಸಿದ್ದಾರೆ.

ಕಾರ್ಮಿಕರ ಸಚಿವರಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳಿಗೆ ಸಲ್ಲಿಸಲಾಯಿತು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಜಿ.ರಾಘವೇಂದ್ರ, ಎಸ್.ಎಂ. ಶರ್ಮಾ, ವಿ.ಜಿ. ದೇಸಾಯಿ, ಶರಣು ಹೆರೂರ, ಈಶ್ವರ ಕುಂಬಾರ, ತುಳಜಾರಾಮ
ಹಲವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.