ADVERTISEMENT

ಕಲಬುರ್ಗಿ: ‘ಹಣ ಬಳಕೆಯಾಗದಿದ್ದರೆ ಅಧಿಕಾರಿಗಳೇ ಹೊಣೆ’

ಹಣಕಾಸು, ಲೆಕ್ಕಪರಿಶೋಧನೆ ಹಾಗೂ ಯೋಜನಾ ಸ್ಥಾಯಿ ಸಮಿತಿ ಸಭೆಯಲ್ಲಿ ಅಧ್ಯಕ್ಷೆ ಸುವರ್ಣಾ ಮಾಲಾಜಿ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2020, 15:05 IST
Last Updated 7 ಸೆಪ್ಟೆಂಬರ್ 2020, 15:05 IST
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಾಲಾಜಿ ಅವರ ಅಧ್ಯಕ್ಷತೆಯಲ್ಲಿ ಹಣಕಾಸು, ಲೆಕ್ಕಪರಿಶೋಧನೆ ಹಾಗೂ ಯೋಜನಾ ಸ್ಥಾಯಿ ಸಮಿತಿ ಸಭೆ ನಡೆಯಿತು
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಾಲಾಜಿ ಅವರ ಅಧ್ಯಕ್ಷತೆಯಲ್ಲಿ ಹಣಕಾಸು, ಲೆಕ್ಕಪರಿಶೋಧನೆ ಹಾಗೂ ಯೋಜನಾ ಸ್ಥಾಯಿ ಸಮಿತಿ ಸಭೆ ನಡೆಯಿತು   

ಕಲಬುರ್ಗಿ: ಪ್ರಸಕ್ತ ಸಾಲಿಗೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಇಲಾಖೆಗಳಿಗೆ ಹಂಚಿಕೆ ಮಾಡಲಾದ ಅನುದಾನಕ್ಕೆ ಕ್ರಿಯಾ ಯೋಜನೆ ರೂಪಿಸಿ ವರ್ಷಾಂತ್ಯದೊಳಗೆ ಅನುಷ್ಠಾನ ಮಾಡುವ ಮೂಲಕ ಆರ್ಥಿಕ ಸಾಧನೆ ಮಾಡಬೇಕು. ಅನುದಾನ ಖರ್ಚಾಗದೆ ವಾಪಸ್‌ ಆದಲ್ಲಿ ಸಂಬಂಧಿಸಿದ ಅಧಿಕಾರಗಳನ್ನೇ ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಾಲಾಜಿ ತಾಕೀತು ಮಾಡಿದರು.

ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಣಕಾಸು, ಲೆಕ್ಕಪರಿಶೋಧನೆ ಹಾಗೂ ಯೋಜನಾ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕ್ರಿಯಾ ಯೋಜನೆಯನ್ವಯ ಕಾಮಗಾರಿಗಳಿಗೆ ನಿಗದಿತ ಅನುದಾನ ಖರ್ಚು ಮಾಡದೆ ಹಾಗೇ ಇಟ್ಟುಕೊಂಡಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸರ್ಕಾರಕ್ಕೆ ವರದಿ ಮಾಡಲಾಗುವುದು. ಅನುದಾನ ಬಳಕೆಯಲ್ಲಿ ಕರ್ತವ್ಯ ನಿರ್ಲಕ್ಷತನ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ADVERTISEMENT

‘ಅನುದಾನ ಕುರಿತು ಯಾವುದೇ ಸಮಸ್ಯೆಗಳಿದ್ದಲ್ಲಿ ಅಧಿಕಾರಿಗಳು ನೇರವಾಗಿ ನನ್ನನ್ನು ಭೇಟಿಯಾಗಿ ಚರ್ಚಿಸಬೇಕು’ ಎಂದರು.

ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯ ಕರ್ತವ್ಯವನ್ನು ಜಿ.ಪಂ. ಅಧ್ಯಕ್ಷರು ಶ್ಲಾಘಿಸಿದರು.

ಸಭೆಯ ಆರಂಭದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಇತ್ತೀಚೆಗೆ ನಿಧನರಾದ ಪ್ರಯುಕ್ತ ಒಂದು ನಿಮಿಷ ಮೌನಾಚರಣೆ ಮಾಡಿ ಮೃತರಿಗೆ ಗೌರವ ಸಲ್ಲಿಸಲಾಯಿತು.

ಸಭೆಯಲ್ಲಿ ಸಮಿತಿ ಸದಸ್ಯರುಗಳಾದ ಶಿವರಾಜ ಪಾಟೀಲ ರದ್ದೇವಾಡಗಿ, ಶಿವಾನಂದ ಪಾಟೀಲ, ಶಿವಶರಣಪ್ಪ ಆರ್. ಶಂಕರ, ದೇವಕ್ಕಿ ಚನ್ನಮಲ್ಲಯ್ಯ ಹಿರೇಮಠ, ಕಲಾವತಿ ಮಲ್ಲಣ್ಣ ನಾಗೂರೆ, ಸದಸ್ಯ ಕಾರ್ಯದರ್ಶಿ ಕಿಶೋರಕುಮಾರ ದುಬೆ ಸೇರಿದಂತೆ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.