ADVERTISEMENT

ಅಂಗವಿಕಲ ಮಕ್ಕಳನ್ನು ಮುಖ್ಯವಾಹಿನಿಗೆ ತನ್ನಿ-ಬೋಪಯ್ಯ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2012, 7:50 IST
Last Updated 13 ಮಾರ್ಚ್ 2012, 7:50 IST

ವಿರಾಜಪೇಟೆ: ಅಂಗವಿಕಲತೆ ಮಕ್ಕಳಿಗೆ ಶಾಪವಲ್ಲ. ಅಂಥ ಮಕ್ಕಳನ್ನು ಪ್ರೀತಿ ವಿಶ್ವಾಸದಿಂದ ನೋಡಿಕೊಂಡು ಜೀವನ ನಿರ್ವಹಣೆಗೆ ಯೋಗ್ಯರನ್ನಾಗಿ ಮಾಡುವುದು ಪೋಷಕರು ಹಾಗೂ ಶಿಕ್ಷಕರ ಜವಾಬ್ದಾರಿ ಎಂದು ವಿಧಾನಸಭಾ ಆಧ್ಯಕ್ಷ ಕೆ.ಜಿ.ಬೋಪಯ್ಯ ಹೇಳಿದರು.

ವಿರಾಜಪೇಟೆ ಸರ್ವ ಶಿಕ್ಷಣ ಅಭಿಯಾನದ ವತಿಯಿಂದ ಸೋಮವಾರ ಇಲ್ಲಿಯ ಜಯಪ್ರಕಾಶ್ ಬಾಲಕಿಯರ ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆದ ಅಂಗವಿಕಲ ಹಾಗೂ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಸಾಧನ ಸಲಕರಣೆ ವಿತರಿಸಿ ಅವರು ಮಾತನಾಡಿದರು.

ಅಂಗವಿಕಲ ಮಕ್ಕಳನ್ನು ಕೀಳಾಗಿ ಕಾಣದೇ ಅವರಿಗೆ ಸಮಾಜದಲ್ಲಿ ಸೂಕ್ತ ಸ್ಥಾನ ಕಲ್ಪಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಪ್ರಾಮಾಣಿಕ ಪ್ರಯತ್ನ ನಡೆಸಬೇಕು. ಸರ್ಕಾರ ಈ ಮಕ್ಕಳಿಗಾಗಿ ವಿಶೇಷ ಸವಲತ್ತು ಒದಗಿಸುತ್ತಿದ್ದು, ಇದನ್ನು ಸದುಪಯೋಗಪಡಿಸಿಕೊಂಡು ಅವರ ಭವಿಷ್ಯ ಉಜ್ವಲಗೊಳಿಸಬೇಕು ಎಂದರು.

ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಧರಣಿ ಕಟ್ಟಿ ಮಾತನಾಡಿ ಅಂಗವಿಕಲ ಮಕ್ಕಳಿಗೆ ಸಮಾಜದಲ್ಲಿ ಸಮಾನ ಅವಕಾಶ ಲಭಿಸಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಪಟ್ಟಣ ಪಂಚಾಯಿತಿ ಅಧ್ಯಕ್ಷ ವಿ.ಕೆ.ಸತೀಶ್‌ಕುಮಾರ್ ಮಾತನಾಡಿ ಅಂಗವಿಕಲ ಮಕ್ಕಳಿಗೆ ಚಿಕ್ಕಂದಿನಿಂದಲೇ ಸ್ವಾವಲಂಬಿ ಬದುಕು ರೂಪಿಸಿಕೊಳ್ಳುವ ಶಿಕ್ಷಣ ಕೊಡಬೇಕು ಎಂದರು. ಸರ್ವ ಶಿಕ್ಷಣ ಅಭಿಯಾನದ ಸಮನ್ವಯ ಅಧಿಕಾರಿ ಪ್ರಕಾಶ್, ಶಾಲೆಯ ಮುಖ್ಯ ಶಿಕ್ಷಕಿ ಸುಶೀಲಮ್ಮ, ಶಿಕ್ಷಕಿಯರಾದ ದಿವ್ಯ, ಲೀಲಾ ಉಪಸ್ಥಿತರಿದ್ದರು.

ಸಭೆಯಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು. ಕ್ಷೇತ್ರ ಶಿಕ್ಷಣ ಅಧಿಕಾರಿ ಭಾಗ್ಯಲಕ್ಷ್ಮಿ ಸ್ವಾಗತಿಸಿದರು. ಕೆ.ಎಸ್.ಆಜಿತ್ ನಿರೂಪಿಸಿದರು. ಪ್ರಕಾಶ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.