ADVERTISEMENT

ಅಂತರರಾಷ್ಟ್ರೀಯ ಸಹಕಾರ ವರ್ಷ: ವಿವಿಧ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2012, 10:40 IST
Last Updated 12 ಡಿಸೆಂಬರ್ 2012, 10:40 IST
ಮಡಿಕೇರಿಯ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಮಂಗಳವಾರ ನಡೆದ ಚರ್ಚಾ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮಡಿಕೇರಿಯ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಮಂಗಳವಾರ ನಡೆದ ಚರ್ಚಾ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.   

ಮಡಿಕೇರಿ: ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ ) ಆಶ್ರಯದಲ್ಲಿ `ಅಂತರರಾಷ್ಟ್ರೀಯ ಸಹಕಾರ ವರ್ಷ 2012' ಅಂಗವಾಗಿ ನಗರದ ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಮಂಗಳವಾರ ಪ್ರಬಂಧ ಮತ್ತು ಚರ್ಚಾ ಸ್ಪರ್ಧೆ ನಡೆಯಿತು.

`ದೇಶದಲ್ಲಿ ಸಹಕಾರ ಚಳುವಳಿ ನಡೆದು ಬಂದ ದಾರಿ' ಎಂಬ ವಿಷಯದ ಬಗ್ಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಗೆ ಜಿಲ್ಲೆಯ ಹಲವು ಪ್ರೌಢಶಾಲೆಗಳಿಂದ ಸುಮಾರು 30 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪದವಿಪೂರ್ವ ವಿದ್ಯಾರ್ಥಿಗಳಿಗೆ `ಸಹಕಾರ ಕ್ಷೇತ್ರದಿಂದ ಗ್ರಾಮೀಣ ಜನರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಸಾಧ್ಯ' ಎಂಬ ವಿಷಯದ ಬಗ್ಗೆ ಚರ್ಚಾ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ 16 ವಿದ್ಯಾರ್ಥಿಗಳು ಭಾಗವಹಿಸಿ ವಿಷಯದ ಪರ ಹಾಗೂ ವಿರೋಧವಾಗಿ ವಿಚಾರ ಮಂಡಿಸಿದರು.

ಪ್ರಬಂಧ ಸ್ಪರ್ಧೆ ವಿಜೇತರು: ಮಕ್ಕಂದೂರಿನ ಸರ್ಕಾರಿ ಪ್ರೌಢಶಾಲೆಯ ಬಿ.ಸಿ. ಅಶ್ವಿನಿ (ಪ್ರಥಮ), ಗಾಳಿಬೀಡಿನ ಸರ್ಕಾರಿ ಪ್ರೌಢಶಾಲೆಯ ಕೆ.ಯು.ವಿಕಾಸ್ (ದ್ವಿತೀಯ), ಮಡಿಕೇರಿ ಸರ್ಕಾರಿ ಪದವಿಪೂರ್ವ ಕಾಲೇಜಿನ (ಪ್ರೌಢಶಾಲಾ ವಿಭಾಗ) ಬಿ.ಎಸ್.ಶ್ವೇತಾ (ತೃತೀಯ).

ಚರ್ಚಾಸ್ಪರ್ಧೆ ವಿಜೇತರು: ಮಡಿಕೇರಿ ಸಂತ ಮೈಕಲರ ಪದವಿಪೂರ್ವ ಕಾಲೇಜಿನ ಸುಲ್ತಾನ್ ಶಬಿತ್ (ಪ್ರಥಮ), ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೇಘನಾ (ದ್ವಿತೀಯ), ಮೂರ್ನಾಡು ಪಪೂ ಕಾಲೇಜಿನ ಕೆ.ಯು.ದೀಪಿಕಾ (ತೃತೀಯ).
ಈ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಬಹುಮಾನ ಪಡೆದವರು ಮುಂದಿನ ದಿನಗಳಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ  ಭಾಗವಹಿಸಲು ಅರ್ಹತೆ ಪಡೆದಿದ್ದಾರೆ.

ಕರುಂಬಯ್ಯ, ಎಂ.ಸಿ. ನಾಣಯ್ಯ, ಮಂದಣ್ಣ ಗೌರಮ್ಮ ಅವರ ದತ್ತಿ ಪ್ರಶಸ್ತಿಯನ್ನು ಸೋಮವಾರಪೇಟೆ ವಿದ್ಯಾ ವಿಕಾಸ ಆಂಗ್ಲ ಮಾದ್ಯಮ ಶಾಲೆಯ ಕೆ.ಜಿ. ಪ್ರಪುಲ್ಲಾ (ಪ್ರಬಂಧ) ಹಾಗೂ ಚೇರಂಬಾಣೆ ಅರುಣಾ ಪದವಿ ಪೂರ್ವ ಕಾಲೇಜಿನ ಡೀನಾ ಪುರುಷೊತ್ತಮ್ (ಚರ್ಚಾ ಸ್ಪರ್ಧೆ) ಅವರಿಗೆ ನೀಡಲಾಯಿತು.

ಚರ್ಚಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿರಾಜಪೇಟೆ ಕಾವೇರಿ ಕಾಲೇಜಿನ ಕೆ.ಎಂ. ಆಶೀಫ್, ಗೋಣಿಕೊಪ್ಪ ಕಾವೇರಿ ಕಾಲೇಜಿನ ಕಂಪನಾ, ಶನಿವಾರಸಂತೆ ಭಾರತೀಯ ವಿದ್ಯಾ ಸಂಸ್ಥೆಯ ಕೆ.ಜಿ. ರೂಪ, ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎಲ್.ಪಿ. ಪವನ್‌ಕುಮಾರ್, ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎಂ.ಡಿ. ಜಯಶ್ರೀ ಅವರಿಗೆ ಸಮಾಧಾನಕರ ಬಹುಮಾನ ನೀಡಲಾಯಿತು.

ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎಂ.ಪಿ. ಮುತ್ತಪ್ಪ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಬಲ್ಲಾರಂಡ ಮಣಿ ಉತ್ತಪ್ಪ, ಸಹಕಾರಿ ಸಂಸ್ಥೆಗಳ ಲೆಕ್ಕ ಪರಿಶೋಧಕ ಎಸ್. ಷಣ್ಮುಖ ಸ್ವಾಮಿ, ಮಡಿಕೇರಿ ಪದವಿ ಪೂರ್ವ ಕಾಲೇಜಿನ (ಪ್ರೌಢಶಾಲಾ ವಿಭಾಗ) ಶಿಕ್ಷಕಿ ದೇವಮ್ಮ ಹಾಗೂ ಇತರರು ಹಾಜರಿದ್ದರು.

ಸ್ಪರ್ಧೆಯ ತೀರ್ಪುಗಾರರಾಗಿ ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ಎಂ.ವೆಂಕಟಸ್ವಾಮಿ, ಜಿಲ್ಲಾ ಸಹಕಾರ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಪಿ.ಎಲ್. ಜ್ಯೋತೀಂದ್ರ, ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರಾಂಶುಪಾಲ ಎನ್.ಎಂ. ಶಿವಕುಮಾರ್ ಕಾರ್ಯ ನಿರ್ವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.