ಮಡಿಕೇರಿ: ಶಾಲೆಗಳಲ್ಲಿ ದುಡಿಯುತ್ತಿರುವ ಅಕ್ಷರ ದಾಸೋಹ ನೌಕರರಿಗೆ ಕನಿಷ್ಠ ವೇತನ ನೀಡುವಂತೆ ಒತ್ತಾಯಿಸಿ ಅ.11 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಅಕ್ಷರ ದಾಸೋಹ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಮಹಾದೇವ ತಿಳಿಸಿದರು.
ನಗರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಬೇಡಿಕೆ ಈಡೇರದಿದ್ದಲ್ಲಿ ಅ.20 ರಂದು ವಿಧಾನಸೌಧ ಚಲೋ ಚಳುವಳಿ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಕೆಲ ಶಾಲೆಯ ಶಿಕ್ಷಕರು, ಗ್ರಾಮ ಪಂಚಾಯಿತಿ ಪದಾಧಿಕಾರಿಗಳು ನೀಡುತ್ತಿರುವ ಕಿರುಕುಳವನ್ನು ಅನುಭವಿಸಿ, ಕನಿಷ್ಠ ವೇತನವು ಇಲ್ಲದೇ ಕಳೆದ ಹಲವು ವರ್ಷಗಳಿಂದ ಈ ನೌಕರರು ದುಡಿಯುತ್ತಿದ್ದಾರೆ ಎಂದು ಅವರು ತಿಳಿಸಿದರು.
ಈ ನಿಟ್ಟಿನಲ್ಲಿ ಅಕ್ಷರ ದಾಸೋಹ ನೌಕರರ ಸಂಘದ ಬೇಡಿಕೆಗಳಾದ ದಿನವೊಂದಕ್ಕೆ 200 ರೂಪಾಯಿ ವೇತನ ನೀಡಬೇಕು. ಅಕ್ಷರ ದಾಸೋಹವನ್ನು ಖಾಸಗೀಕರಣ ಮಾಡಬಾರದು ಎಂದು ಒತ್ತಾಯಿಸಿದರು.
ಅಡುಗೆ ಮಾಡುವ ಸಂದರ್ಭದಲ್ಲಿ ಯಾವುದಾದರು ಅನಾಹುತ ಸಂಭವಿಸಿದ್ದಲ್ಲಿ 1 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ನೌಕರರಿಗೆ ಅಂತ್ಯೋದಯ ಕಾರ್ಡ್ ನೀಡಬೇಕು ಎಂದು ಆಗ್ರಸಿದರು.
ನೌಕರರಿಗೆ ಪಂಚಾಯಿತಿ ನೌಕರರು ಹಾಗೂ ಸದಸ್ಯರಿಂದ ಕಿರುಕುಳ ನೀಡುವುದು ನಿಲ್ಲಬೇಕು. ಅಕ್ಷರ ದಾಸೋಹ ನೌಕರರ ನೇಮಕಾತಿಯ ಅಧಿಕಾರವನ್ನು ಪಂಚಾಯಿತಿಗೆ ನೀಡದೆ ಇಲಾಖೆಯೇ ನಿರ್ವಹಿಸಬೇಕು. ಏಪ್ರಿಲ್ ಹಾಗೂ ಮೇ ತಿಂಗಳ ರಜೆ ಸಂಬಳವನ್ನು ನೀಡಬೇಕು ಎಂದು ಆಗ್ರಹಿಸಿದರು.
ಸಂಘದ ಉಪಾಧ್ಯಕ್ಷೆ ನಾಗಮ್ಮ ಮಾತನಾಡಿ, ದುಡಿಯುವ ಕೈಗೆ ಕೆಲಸ ಮಾತ್ರ ಕೊಟ್ಟಿದ್ದಾರೆ. ಆದರೆ ಕನಿಷ್ಠ ವೇತನವನ್ನು ನೀಡುತ್ತಿಲ್ಲ ಎಂದು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷೆ ಕಾವೇರಿ, ಕಾರ್ಯದರ್ಶಿ ಜಾಜಿ, ಖಜಾಂಚಿ ಪ್ರಮೀಳಾ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.