ಶನಿವಾರಸಂತೆ: ‘ಭಾಷೆ ಹಾಗೂ ಸಂಸ್ಕೃತಿ ಬಗ್ಗೆ ಅಸಡ್ಡೆಯ ಮನೋಭಾವನೆಯಿಂದ ಕನ್ನಡ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳಲು ಕಾರಣವಾಗಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಲೋಕೇಶ್ ಸಾಗರ್ ಆತಂಕ ವ್ಯಕ್ತಪಡಿಸಿದರು.
ಸಮೀಪದ ಕೊಡ್ಲಿಪೇಟೆಯ ಕಿರಿ ಕೊಡ್ಲಿಮಠದ ಪ್ರಾರ್ಥನಾ ಮಂದಿರದಲ್ಲಿ ಕಸಾಪ ಹೋಬಳಿ ಘಟಕದ ವತಿಯಿಂದ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗಾಗಿ ನಡೆದ ಶುದ್ಧ ಕನ್ನಡದಲ್ಲಿ ಆಶುಭಾಷಣ, ಭಾವಗೀತೆ, ಪ್ರಬಂಧ ಸ್ಪರ್ಧೆಗಳ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕನ್ನಡ ಸಾಹಿತ್ಯದ ಬಗ್ಗೆಯೂ ಆಸಕ್ತಿ ಮುಡಿಸುವ ನಿಟ್ಟಿನಲ್ಲಿ ಶಾಲಾ– ಕಾಲೇಜುಗಳ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು ಕಿರಿಕೊಡ್ಲಿ ವಿದ್ಯಾಸಂಸ್ಥೆಯ ಗ್ರಂಥಾಲಯ ಮತ್ತು ಕೊಡ್ಲಿಪೇಟೆ ಪದವಿ ಪೂರ್ವ ಗ್ರಂಥಾಲಯಕ್ಕೆ ತಲಾ 300 ಪುಸ್ತಕಗಳನ್ನು ಉಚಿತವಾಗಿ ನೀಡಲಿದ್ದು ಈ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ವಿಸ್ತರಿಸಲಾಗುವುದು ಎಂದರು.
ಕಿರಿಕೊಡ್ಲಿಮಠದ ಸದಾಶಿವ ಸ್ವಾಮೀಜಿ ಮಾತನಾಡಿ, ಮಾತೃಭಾಷೆ ಮತ್ತು ಸಂಸ್ಕೃತಿಯಿಂದ ವಿದ್ಯಾರ್ಥಿಗಳ ಸಾಮಾನ್ಯ ಜ್ಞಾನ ವೃದ್ಧಿಸುತ್ತದೆ. ಪಠ್ಯ ಪುಸ್ತಗಳೊಂದಿಗೆ ವಿದ್ಯಾರ್ಥಿಗಳು ಇತರ ಗ್ರಂಥಗಳ ಬಗೆಗೂ ಆಸಕ್ತಿ ಮೂಡಿಸಿಕೊಳ್ಳಬೇಕು ಎಂದರು.
ಕಸಾಪ ಕೊಡ್ಲಿಪೇಟೆ ಹೋಬಳಿ ಘಟಕದ ಅಧ್ಯಕ್ಷ ಅಬ್ದುಲ್ ರಬ್ ಅಧ್ಯಕ್ಷತೆ ವಹಿಸಿದ್ದರು. ಮುದ್ದಿನಕಟ್ಟೆ ಮಠದ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಕಾರ್ಯಕ್ರಮ ಸಂಯೋಜಕ ಸುಂದರ್, ಜಿಲ್ಲಾ ಕಸಾಪ ಮಾಧ್ಯಮ ಕಾರ್ಯದರ್ಶಿ ಎನ್.ಎ.ಅಶ್ವಥ್ ಕುಮಾರ್, ಸದಸ್ಯ ಡಿ.ಬಿ. ಸೋಮಪ್ಪ, ವಿದ್ಯಾಸಂಸ್ಥೆ ಪ್ರಾಂಶುಪಾಲರಾದ ತನುಜಾ, ಉಪನ್ಯಾಸಕ ಸತೀಶ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.