ವಿರಾಜಪೇಟೆ: ಯುಪಿಎ ಸರ್ಕಾರ ಮಾಡಿಕೊಂಡಿರುವ ಒಪ್ಪಂದವೇ ಕರಿ ಮೆಣಸು ಆಮದಿಗೆ ಕಾರಣ. ಕರಿಮೆಣಸು ಆಮದಿನಿಂದ ಬೆಳೆಗಾರರಿಗೆ ಆಗುತ್ತಿರುವ ತೊಂದರೆ ಬಗ್ಗೆ ಕೇಂದ್ರ ವಾಣಿಜ್ಯ ಸಚಿವರ ಬಳಿ ನಿಯೋಗ ತೆರಳಿ ಚರ್ಚೆ ನಡೆಸುವುದಾಗಿ ಸಂಸದ ಪ್ರತಾಪ್ ಸಿಂಹ ಭರವಸೆ ನೀಡಿದರು.
ಪಟ್ಟಣದ ಕಾರು ನಿಲ್ದಾಣದಲ್ಲಿ ಬುಧವಾರ ಬಿಜೆಪಿ ವತಿಯಿಂದ ನಡೆದ ಜನಜಾಗೃತಿ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.
ಕಸ್ತೂರಿ ರಂಗನ್ ವರದಿಯ ಕುರಿತು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸೂಕ್ತ ವರದಿ ಸಲ್ಲಿಸುವಲ್ಲಿ ವಿಫಲವಾಗಿದ್ದರೂ ಕೇಂದ್ರ ಸರ್ಕಾರದ ಮೇಲೆ ಆರೋಪವನ್ನು ಹೊರಿಸುತ್ತಿದೆ. ಈ ವಿಚಾರದಲ್ಲಿ ಜಿಲ್ಲೆಯ ಜನತೆಗೆ ಕೊಟ್ಟ ಮಾತಿಗೆ ಬದ್ಧನಾಗಿರುತ್ತೇನೆ ಎಂದು ವ್ಯಂಗ್ಯವಾಡಿದರು.
ಶಾಸಕ ಕೆ.ಜಿ.ಬೋಪಯ್ಯ, ರಾಜ್ಯ ಸರ್ಕಾರ ಕೇವಲ ಘೋಷಣೆಯನ್ನು ಮಾಡುತ್ತಿದೆಯೇ ಹೊರತು ಯಾವುದೇ ಕೆಲಸಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ ಎಂದರು.
ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ರಾಜ್ಯ ಸರ್ಕಾರದಿಂದ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗೆ ಬರುತ್ತಿದ್ದ ಅನುದಾನದ ಪ್ರಮಾಣವು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ ಎಂದು ದೂರಿದರು.
ಬಿಜೆಪಿಯ ತಾಲ್ಲೂಕು ಘಟಕದ ಅಧ್ಯಕ್ಷ ಅರುಣ್ ಭೀಮಯ್ಯ ಅಧ್ಯಕ್ಷತೆ ವಹಿಸಿದ್ದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ್, ಬಿಜೆಪಿಯ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಸುಜಾ ಕುಶಾಲಪ್ಪ, ಜಿಲ್ಲಾ ಘಟಕದ ಉಪಾಧ್ಯಕ್ಷ ರಘು ನಾಣಯ್ಯ, ನಗರ ಘಟಕದ ಅಧ್ಯಕ್ಷ ಎ. ಅನಿಲ್ ಮಂದಣ್ಣ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಇ.ಸಿ. ಜೀವನ್, ಗೋಣಿಕೊಪ್ಪಲು ಆರ್.ಎಂಸಿಯ ಅಧ್ಯಕ್ಷ ಎಂ. ಸುವಿನ್ ಗಣಪತಿ, ರಾಜ್ಯ ಅಲ್ಪ ಸಂಖ್ಯಾತ ಮೋರ್ಚಾದ ಕಾರ್ಯದರ್ಶಿ ಜೋಕಿಂ ರಾಡ್ರಿಗಸ್, ಜಿಲ್ಲಾ ಪಂಚಾಯಿತಿ ಸದಸ್ಯ ಅಚ್ಚಪಂಡ ಮಹೇಶ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಸೀತಮ್ಮ ಮತ್ತಿತರರು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.