ADVERTISEMENT

ಕಸಾಪ ಚುನಾವಣೆ: ಆಕಾಂಕ್ಷಿಗಳ ಮನವಿ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2012, 10:25 IST
Last Updated 11 ಏಪ್ರಿಲ್ 2012, 10:25 IST

ಮಡಿಕೇರಿ: ತಮಗೆ ಮತವನ್ನು ನೀಡುವಂತೆ ಕನ್ನಡ ಸಾಹಿತ್ಯ ಪರಿಷತ್‌ನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಪ್ರೊ. ಜಯಪ್ರಕಾಶಗೌಡ ಹಾಗೂ ಕೊಡಗು ಜಿಲ್ಲಾ ಕ.ಸಾ.ಪ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಬಿ.ಜಿ.ರಘುನಾಥ ನಾಯಕ್ ಅವರು ಕೊಡಗು ಜಿಲ್ಲೆಯ ಸಾಹಿತ್ಯಾಸಕ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ನಗರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರೊ. ಜಯಪ್ರಕಾಶಗೌಡ ಅವರು ಮಾತನಾಡಿ, ಮಂಡ್ಯ ಜಿಲ್ಲೆಯ ಪಿ.ಇ.ಎಸ್. ಕಾಲೇಜಿನಲ್ಲಿ  ಕನ್ನಡ ಪ್ರಾಧ್ಯಾಪಕನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಹಲವು ಕನ್ನಡ ಸಂಘಟನೆಗಳಲ್ಲಿ ಸೇವೆ ಸಲ್ಲಿಸಿರುವ ಅನುಭವ ತಮಗಿದೆ. ಕನ್ನಡ ಭಾಷೆಯನ್ನು  ಉತ್ತುಂಗ ಸ್ಥಾನಕ್ಕೆ ಕೊಂಡ್ಯೊಯಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ    ಅವರು ತಿಳಿಸಿದರು.

ರಾಜ್ಯದಲ್ಲಿ ಸುಮಾರು 1.08 ಲಕ್ಷ ಮತದಾರರಿದ್ದು, ಈ ಬಾರಿ ನೂತನ ವ್ಯಕ್ತಿಗಳಿಗೆ ಅವಕಾಶ ನೀಡಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತ ಪಡಿಸಿದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ  ಬಿ.ಜಿ.ರಘುನಾಥ ನಾಯಕ್ ಅವರು ಮಾತನಾಡಿ, ವೀರಾಜಪೇಟೆ ಘಟಕದ ಅಧ್ಯಕ್ಷರಾಗಿ ತಾವು ಉತ್ತಮ ಸೇವೆ ಸಲ್ಲಿಸಿದ್ದು, ಜಿಲ್ಲಾ    ಕಸಾಪ  ಅಧ್ಯಕ್ಷರಾಗಿ ಸೇವೆ ಸಲ್ಲಿಸುವ     ಆಶಯದಿಂದ ಚುನಾವಣೆಗೆ ಸ್ಪರ್ಧಿಸಿರುವುದಾಗಿ ತಿಳಿಸಿದರು. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಡಿಕೇರಿಯಲ್ಲಿ  ನಡೆಸುವುದು, ಜಿಲ್ಲಾ ಸಾಹಿತ್ಯ ಭವನ, ಎಲ್ಲಾ ತಾಲ್ಲೂಕುಗಳಲ್ಲಿ  ನಿವೇಶನ ಮತ್ತು ಸಾಹಿತ್ಯ ಭವನ ನಿರ್ಮಿಸಲು ಪ್ರಯತ್ನ ಮಾಡುವುದಾಗಿ ತಿಳಿಸಿದರು.

ಎರಡು ಅವಧಿಗೆ ಜಿಲ್ಲಾ ಕಸಾಪ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ  ಟಿ.ಪಿ.ರಮೇಶ್ ಅವರು ಈ ಬಾರಿಯೂ ಪುನಃ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಮೂಲಕ ಹೊಸ ವ್ಯಕ್ತಿಗಳಿಗೆ ಅವಕಾಶ ದೊರೆಯದಂತೆ ತಡೆಯೊಡ್ಡುತ್ತಿದ್ದಾರೆ ಎಂದರು.

 ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಪ್ರಾಧ್ಯಾಪಕ ಪ್ರೊ.ಚಂದ್ರಶೇಖರಯ್ಯ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್  ಮಾಜಿ ಪದಾಧಿಕಾರಿಗಳಾದ ಶೇಖರ್ ಮತ್ತು    ಪೂವಯ್ಯ  ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.