ಗೋಣಿಕೊಪ್ಪಲು: ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಅಧಿಕವಾಗಿದ್ದು, ಅರಣ್ಯ ಇಲಾಖೆಯು ಅವುಗಳನ್ನು ಅರಣ್ಯಕ್ಕೆ ಓಡಿಸುವ ಕೆಲಸ ಮಾಡುತ್ತಿಲ್ಲ. ಕೂಡಲೇ ಕ್ರಮ ಕೈಗೊಳ್ಳದಿದ್ದಲ್ಲಿ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೊಲ್ಲೀರ ಗೋಪಿ ಚಿಣ್ಣಪ್ಪ ಹೇಳಿದರು.
ಈಚೆಗೆ ನಡೆದ ಗ್ರಾಮಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾಡಾನೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಹೋಬಳಿ ಮಟ್ಟದಿಂದ ಜನಾಂದೋಲನ ರೂಪಿಸಲಾಗುವುದು ಎಂದು ತಿಳಿಸಿದರು.
ಮೇಜರ್ ಜನರಲ್ ಕಾರ್ಯಪ್ಪ ಮಾತನಾಡಿ, ಹೊಸೂರು ಹಾಗೂ ಅಮ್ಮತ್ತಿ ಭಾಗದಲ್ಲಿ ಬೆಗಿನ ಜಾವದಲ್ಲೇ ಕಾಫಿ ತೋಟಗಳಲ್ಲಿ ಕಾಡಾನೆಗಳು ಕಾಣಿಸಿಕೊಳ್ಳುತ್ತಿವೆ. ತೋಟದಲ್ಲಿ ಕೆಲಸ ಮಾಡಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ. ಈ ಭಾಗದಲ್ಲಿ ಕಾಡಾನೆಗಳನ್ನು ಓಡಿಸುವ ಕೆಲಸವನ್ನು ಅರಣ್ಯ ಇಲಾಖೆ ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಳೆದ ಕೆಲವು ಸಮಯಗಳ ಹಿಂದೆ ಈ ಭಾಗದಲ್ಲಿ ವಿದ್ಯುತ್ ಸ್ಪರ್ಶದಿಂದ ನಾಲ್ಕು ಆನೆಗಳು ಮೃತಪಟ್ಟಿದ್ದವು. ಅವುಗಳನ್ನು ಸರಿಯಾಗಿ ಮುಚ್ಚದೇ ಇರುವುದರಿಂದ ದುರ್ವಾಸನೆ ಬೀರಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ ಎಂದರು. ತಾಲ್ಲೂಕು ಪಂಚಾಯಿತಿ ಸದಸ್ಯ ಅಜಿತ್ ಕರುಂಬಯ್ಯ, ಪಿಡಿಒ ಶ್ರೀನಿವಾಸ್, ನೋಡಲ್ ಅಧಿಕಾರಿ ಪ್ರಿಯಾ, ಉಪಾಧ್ಯಕ್ಷೆ ವಿಶಾಲಾಕ್ಷಿ ಹ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.