ADVERTISEMENT

ಕಾಡಾನೆ ಹಿಂಡು: ಆತಂಕ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2017, 7:16 IST
Last Updated 26 ನವೆಂಬರ್ 2017, 7:16 IST

ನಾಪೋಕ್ಲು: ಚೇಲಾವರ ಗ್ರಾಮದಲ್ಲಿ ಒಂದು ಮರಿಯಾನೆ ಸೇರಿದಂತೆ ಮೂರು ಕಾಡಾನೆಗಳು ಹಗಲು- ರಾತ್ರಿ ಭತ್ತದ ಗದ್ದೆ, ಕಾಫಿ ತೋಟ, ಮುಖ್ಯರಸ್ತೆಗಳಲ್ಲಿ ಸಂಚರಿಸುತ್ತಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಪ್ರತಿದಿನ ರಸ್ತೆಗಳಲ್ಲಿ, ತೋಟಗಳಲ್ಲಿ ಕಾಡಾನೆಗಳು ಓಡಾಡುತ್ತಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು, ತೋಟದ ಕಾರ್ಮಿಕರು, ಸಾರ್ವಜನಿಕರು ಭಯದಿಂದ ರಸ್ತೆಯಲ್ಲಿ ಸಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಗ್ರಾಮದ ಕೃಷಿಕರಾದ ಜೈನಿರ ಅಶೋಕ್, ತಿಲಕ್, ಬಾಚಮಂಡ ಲೋಕೇಶ್, ಬೋವೇರಿಯಂಡ ಕುಟುಂಬಸ್ಥರ ತೋಟಗಳಲ್ಲಿ, ಗದ್ದೆಗಳಲ್ಲಿ ಅಲೆದಾಡುತ್ತಿರುವ ಕಾಡಾನೆಗಳು ಭತ್ತದ ಫಸಲು, ಕಾಫಿ ಫಸಲು, ಅಡಿಕೆ, ತೆಂಗು, ಬಾಳೆಗಳನ್ನು ನಾಶಗೊಳಿಸಿವೆ.

ADVERTISEMENT

‘ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸಿಬ್ಬಂದಿ ಆನೆಗಳನ್ನು ಕಾಡಿಗಟ್ಟಲು ಅಸಹಾಯಕತೆ ಪ್ರದರ್ಶಿಸುತ್ತಿದ್ದಾರೆ. ಕಳೆದ ವರ್ಷದ ಆನೆ ನಷ್ಟ ಪರಿಹಾರ ಫಲಾನುಭವಿಗಳಿಗೆ ಇನ್ನೂ ದೊರೆತಿಲ್ಲ. ಬೆಳೆ ನಷ್ಟದ ಬಗ್ಗೆ ಮಹಜರು ನಡೆಸಿ ಸ್ಥಳದಲ್ಲಿಯೇ ಪರಿಹಾರ ನೀಡಲು ಕ್ರಮಕೈಗೊಳ್ಳಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.