ಕುಶಾಲನಗರ: ಕೊಡಗಿನ ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ಕೊಡವ ಅಧ್ಯಯನ ಪೀಠ ಸ್ಥಾಪನೆ ಮಾಡಲಾಗುವುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಕೆ.ಬೈರಪ್ಪ ಹೇಳಿದರು.
ಚಿಕ್ಕಅಳುವಾರ ಸ್ನಾತಕೋತ್ತರ ಕೇಂದ್ರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂದಿನ ಎರಡು ತಿಂಗಳಲ್ಲಿ ಕೊಡವ ಶಬ್ಧಕೋಶ ಬಿಡುಗಡೆಯಾಗಲಿದ್ದು, ನಂತರ ಮೂಲಭೂತ ಸೌಲಭ್ಯವನ್ನು ಹೊಂದಿರುವ ಕಾರ್ಯಪ್ಪ ಕಾಲೇಜಿನಲ್ಲಿ ಅಧ್ಯಯನ ಪೀಠ ಆರಂಭಿಸಲಾಗುವುದು ಎಂದು ಹೇಳಿದರು.
ಅಧ್ಯಯನ ಪೀಠದಿಂದ ಕೊಡವ ಸಾಹಿತ್ಯ, ಸಂಸ್ಕೃತಿ, ಚರಿತ್ರೆ ಹಾಗೂ ಭಾಷೆ ಬಗ್ಗೆ ಅಧ್ಯಯನ ನಡೆಸಲು ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಅಲ್ಲದೆ ಸ್ನಾತಕೋತ್ತರ ವಿಭಾಗದಲ್ಲಿಯೂ ಕೊಡವ ಡಿಪ್ಲೋಮಾ ಕೋರ್ಸ್ ಆರಂಭಿಸಲು ಚಿಂತನೆ ನಡೆಸಲಾಗಿದೆ. ಕೊಡವ ಸಂಸ್ಕೃತಿ, ಭಾಷೆ ಹಾಗೂ ಸಾಹಿತ್ಯ ಕುರಿತ ಅಧ್ಯಯನ ಕೋರ್ಸ್ ಇದಾಗಲಿದೆ ಎಂದರು.
ಕಳೆದ 3 ವರ್ಷಗಳ ಹಿಂದೆ ಚಿಕ್ಕಅಳುವಾರದಲ್ಲಿ ಸ್ಥಾಪನೆಗೊಂಡ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕೇಂದ್ರದಲ್ಲಿ ಆರಂಭದಲ್ಲಿ ಕೇವಲ 47 ವಿದ್ಯಾರ್ಥಿಗಳು ಇದ್ದರು. ಈಗ ಕೇಂದ್ರದಲ್ಲಿ 500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಅಂತರಿಕ ಸಂಪನ್ಮೂಲದಿಂದ ₹55 ಕೋಟಿ ಅನುದಾನವನ್ನು ವಿನಿಯೋಗಿಸಿ ಅಭಿವೃದ್ಧಿ ಪಡಿಸಲಾಗಿದೆ.
2012ರಲ್ಲಿ ರಾಜ್ಯ ಸರ್ಕಾರ ₹1 ಕೋಟಿ ಅನುದಾನ ಮಾತ್ರ ನೀಡಿತ್ತು. ಇದುವರೆಗೆ ಸರ್ಕಾರದಿಂದ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ. ₹10 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದರೆ ಕೇಂದ್ರವನ್ನು ಮತ್ತಷ್ಟು ಅಭಿವೃದ್ಧಿ ಪಡಿಸಬಹುದು ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.