
ಗೋಣಿಕೊಪ್ಪಲು: ಇಲ್ಲಿನ ಕಾವೇರಿ ಕಾಲೇಜಿನಲ್ಲಿ ಅ.30 ಮತ್ತು 31ರಂದು ನಡೆಯಲಿರುವ ಕಾವೇರಿಯನ್ಸ್ ಫೆಸ್ಟ್ ಹಾಗೂ ಫುಡ್ ಫೆಸ್ಟ್ ಕಾರ್ಯಕ್ರಮದ ಬ್ಯಾನರ್ ಹಾಗೂ ಪೋಸ್ಟರ್ಗಳನ್ನು ದಾನಿ ಕೈಬುಲಿರ ಪಾರ್ವತಿ ಬೋಪಯ್ಯ ಮಂಗಳವಾರ ಅನಾವರಣಗೊಳಿಸಿದರು.
ನಂತರ ಮಾತನಾಡಿದ ಅವರು ಯುವ ಸಮುದಾಯ ಸಾಮಾಜಿಕ, ಶಾರೀರಿಕ ಹಾಗೂ ಮಾನಸಿಕವಾಗಿ ಸದೃಢವಾಗಿ ಬೆಳೆಯಬೇಕು. ವಿವಿಧೆಡೆಯಿಂದ ಬಂದಿರುವ ವಿದ್ಯಾರ್ಥಿಗಳು ಒಂದೆಡೆ ಸೇರಿ ವಿವಿಧ ಸ್ಪರ್ಧೆಗಳಲ್ಲಿ ಭಾಗಿಯಾಗಿ ಸ್ನೇಹಪರತೆಯಿಂದ ಬೆರೆಯಬೇಕು. ಕೇಳಿ ಕಲಿ ನೋಡಿ ಕಲಿ ಎಂಬ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ತಂದೆ ತಾಯಿಗೆ, ಓದಿದ ಶಾಲೆಗೆ, ಗುರುಗಳಿಗೆ ಗೌರವ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾವೇರಿ ಕಾಲೇಜು ಪ್ರಾಂಶುಪಾಲ ಡಾ. ಎಂ.ಬಿ.ಕಾವೇರಿಯಪ್ಪ ಮಾತನಾಡಿ, ಕೊಡಗು ಜಿಲ್ಲೆ ಸೇರಿ ಹುಣಸೂರು, ಪಿರಿಯಾಪಟ್ಟಣ ವ್ಯಾಪ್ತಿಯ ಎಲ್ಲ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಕಾವೇರಿಯನ್ಸ್ ಫೆಸ್ಟ್ ಹಾಗೂ ಫುಡ್ ಫೆಸ್ಟ್ ಎಂಬ ಹೆಸರಿನಲ್ಲಿ ಎರಡು ದಿನಗಳ ಕಾಲ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಕ್ರೀಡಾ ಸ್ಪರ್ಧೆ ಆಯೋಜಿಸಲಾಗಿದೆ. ಈಗಾಗಲೇ ಸುಮಾರು 29 ಕಾಲೇಜುಗಳು ನೋಂದಾಯಿಸಿಕೊಂಡಿದ್ದು, ಬೇರೆ ಬೇರೆ ವಿಭಾಗದಲ್ಲಿ 1300 ವಿದ್ಯಾರ್ಥಿಗಳು ವಿವಿಧ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ ಎಂದರು.
ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕೆಂಬ ಉದ್ದೇಶ ಹೊಂದಲಾಗಿದೆ. ದಾನಿಗಳ ಪ್ರೋತ್ಸಾಹದಿಂದ ಕಾವೇರಿಯನ್ಸ್ ಫೆಸ್ಟ್ ಆಯೋಜಿಸಿದ್ದು, ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದರು.
ಕಾವೇರಿ ಎಜುಕೇಷನ್ ಸೊಸೈಟಿ ಉಪಾಧ್ಯಕ್ಷ ಕುಪ್ಪಂಡ ಬೆಳ್ಳಿಯಪ್ಪ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಪ್ರದರ್ಶಿಸಲು ಇದೊಂದು ಅವಕಾಶ. ಶಿಸ್ತುಬದ್ಧ ಜೀವನ ಅಳವಡಿಸಿಕೊಳ್ಳಲು ಸಹಕಾರಿಯೂ ಆಗಿದೆ ಎಂದರು.
ಉಪ ಪ್ರಾಂಶುಪಾಲರಾದ ಪ್ರೊ.ಎಂ.ಎಸ್.ಭಾರತಿ, ಐಕ್ಯೂಎಸಿ ಸಂಚಾಲಕಿ ನಯನಾ ತಮ್ಮಯ್ಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಪಿ.ಪಿ. ಸವಿತಾ, ಹಿರಿಯ ಉಪನ್ಯಾಸಕರಾದ ಸಿ.ಪಿ.ಸುಜಯ, ಕೆ.ಕೆ.ಚಿತ್ರಾವತಿ, ಕಚೇರಿ ಅಧೀಕ್ಷಕಿ ಟಿ.ಕೆ.ಲತಾ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.