
ಮಡಿಕೇರಿ: ಸಮಾಜದಲ್ಲಿ ಗಂಡು ಹಾಗೂ ಹೆಣ್ಣಿನ ನಡುವೆ ಸಮಾನತೆ ಇರಬೇಕು. ಇದರಿಂದ ಅಭಿವೃದ್ಧಿ ಸಾಧ್ಯ ಎಂದು ನಗರಸಭೆ ಅಧ್ಯಕ್ಷ ಎಚ್.ಎಂ.ನಂದಕುಮಾರ್ ಹೇಳಿದರು.
ನಗರದ ಬಾಲಭವನದಲ್ಲಿ ಮಡಿಕೇರಿ-ಸುಳ್ಯದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ಬುಧವಾರ ನಡೆದ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜ ಮತ್ತು ದೇಶ ಅಭಿವೃದ್ಧಿ ಹೊಂದಬೇಕಾದರೆ ಮಹಿಳೆಯರು ಸ್ವಾವಲಂಬಿಯಾಗಿ ಬದುಕುವಂತಾಗಬೇಕು. ಪುರುಷ ಮತ್ತು ಮಹಿಳೆ ಎಂಬ ತಾರತಮ್ಯ ಮಾಡದೆ ಮಹಿಳೆಯರು ಆರ್ಥಿಕ ಸಬಲೀಕರಣದತ್ತ ಮುನ್ನಡೆಯಬೇಕು ಎಂದು ಅವರು ತಿಳಿಸಿದರು.
ಸರ್ಕಾರದ ಜೊತೆ ಧರ್ಮಸ್ಥಳ ಗಾಮೀಣಾಭಿವೃದ್ಧಿಯಂತಹ ಸಂಸ್ಥೆಗಳು ಕೈಜೋಡಿಸಿದಾಗ ದೇಶದ ಅಭಿವೃದ್ಧಿ ಸಾಧ್ಯ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ವಿಜಯಲಕ್ಷ್ಮಿ ಶೆಣೈ ಮಾತನಾಡಿ, ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯೊಂದಿಗೆ ಧರ್ಮಸ್ಥಳ ಗಾಮೀಣಾಭಿವೃದ್ಧಿ ಸಂಸ್ಥೆ ಶ್ರಮಿಸುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಮಡಿಕೇರಿಯಲ್ಲಿ ಮಹಿಳಾ ಕೌಶಲ ತರಬೇತಿ ಮತ್ತಿತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತಾಗಲು ತರಬೇತಿ ಕೇಂದ್ರ ಅಗತ್ಯವಾಗಿ ಬೇಕಾಗಿದ್ದು, ಇದಕ್ಕಾಗಿ ಸೂಕ್ತ ಕಟ್ಟಡ ಬೇಕಾಗಿದೆ ಎಂದು ಅವರು ನಗರಸಭಾ ಅಧ್ಯಕ್ಷರಿಗೆ ಮನವಿ ಮಾಡಿದರು.
ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಯೋಜನಾಧಿಕಾರಿ ಎ.ಯೋಗಿಶ್ ಮಾತನಾಡಿ, ಸಂಸ್ಥೆಯು ರಾಜ್ಯದ 11ಜಿಲ್ಲೆಗಳಲ್ಲಿ ಮಹಿಳೆಯರ ಆರ್ಥಿಕ, ಔದ್ಯೋಗಿಕ, ಸ್ವಾವಲಂಬಿ ಬದುಕಿನ ಕಡೆ ಜಾಗೃತಿ, ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮಹಿಳೆಯರ ಶ್ರೇಯಸ್ಸಿಗೆ ಶ್ರಮಿಸುತ್ತಿದೆ ಎಂದರು. ನಗರಸಭಾ ಸದಸ್ಯ ಅಯ್ಯಪ್ಪ, ಶಿಶು ಅಭಿವೃದ್ಧಿ ಸಂಸ್ಥೆಯ ಸೀತಾಲಕ್ಷ್ಮಿ ರಾಮಚಂದ್ರ. ಕೆ.ನಿಡುಗಣೆ ಗ್ರಾ.ಪಂ.ಅಧ್ಯಕ್ಷ ಡೀನ್ ಬೋಪಣ್ಣ ಮಾತನಾಡಿದರು.
ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದ ಸಮನ್ವಯಾಧಿಕಾರಿ ಸುಧಾ ಉದಯರೈ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಸಂಸ್ಥೆಯ ಕಾರ್ಯ ಚಟುವಟಿಗೆಗಳ ಬಗ್ಗೆ ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.