ಸೊಮವಾರಪೇಟೆ: ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸಲು ಜಿಲ್ಲಾ ಪಂಚಾಯಿತಿ ಹೆಚ್ಚಿನ ಅನುದಾನ ನೀಡಬೇಕು ಜಿಲ್ಲಾ ಪಂಚಾಯಿತಿ ಸದಸ್ಯೆ ಎನ್.ಎಸ್.ಗೀತಾ ಅಭಿಪ್ರಾಯಪಟ್ಟರು.
ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಯುವ ಒಕ್ಕೂಟ, ತಾಲ್ಲೂಕು ಯುವ ಒಕ್ಕೂಟ, ಯಡೂರಿನ ಉದಯ ಯುವಕ ಸಂಘ, ಗ್ರಾಮಾಭಿವೃದ್ಧಿ ಸಮಿತಿ, ಸ್ತ್ರೀ ಶಕ್ತಿ ಮತ್ತು ಸ್ವ ಸಹಾಯ ಗುಂಪುಗಳ ಆಶ್ರಯದಲ್ಲಿ ಯಡೂರು ಗ್ರಾಮದ ವೈ.ಎಂ.ಈರಪ್ಪ ಅವರ ಗದ್ದೆಯಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಹೋಬಳಿ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಪಂಚಾಯಿತಿಯು ಕ್ರೀಡೆಗಳಿಗೆ ನೀಡುತ್ತಿರುವ ಅನುದಾನ ಬಹಳ ಕಡಿಮೆ. ಅಧ್ಯಕ್ಷರೊಂದಿಗೆ ಚರ್ಚಿಸಿ ಅನುದಾನ ಹೆಚ್ಚಿಸಲು ಮನವಿ ಸಲ್ಲಿಸುತ್ತೇನೆ. ಗ್ರಾಮೀಣ ಕ್ರೀಡಾಕೂಟಗಳಿಗೆ ತಮ್ಮ ಅನುದಾನದಿಂದ ಹಣ ನೀಡುವ ಬಗ್ಗೆಯೂ ಪ್ರಯತ್ನಿಸುವುದಾಗಿ ಅವರು ಹೇಳಿದರು.
ಎಲೆಮರೆ ಕಾಯಿಯಂತಿರುವ ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಅಗತ್ಯವಿದೆ. ಇಂತಹ ಕ್ರೀಡಾಕೂಟ ಆಯೋಜಿಸುವುದರಿಂದ, ಕ್ರೀಡೆಗಳಲ್ಲಿ ಭಾಗವಹಿಸುವ ಅವಕಾಶ ಅವರಿಗೂ ಸಿಗುವಂತಾಗುತ್ತದೆ ಎಂದರು.
ಹಾನಗಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತಿಲಕರೈ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಎ.ಎಸ್.ಲಿಂಗರಾಜು, ಜಿಲ್ಲಾ ಯುವ ಒಕ್ಕೂಟ ಅಧ್ಯಕ್ಷ ಎಂ.ಪಿ.ರವಿ, ಗ್ರಾಮ ಪಂಚಾಯಿತಿ ಸದಸ್ಯರಾದ ವೈ.ಎ.ಜಗದೀಶ್, ಪದ್ಮಾವತಿ ಕಷ್ಣಪ್ಪ, ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷ ಎಂ.ಟಿ.ದಿನೇಶ್, ಚೌಡ್ಲು ಕಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ವೈ.ಎಂ.ನಾಗರಾಜ್ ಹಾಗೂ ಉದಯ ಯುವಕ ಸಂಘದ ಅಧ್ಯಕ್ಷ ಡಿ.ಎನ್. ಪವನ್ ಇದ್ದರು. ಉದಯ ಯುವಕ ಸಂಘದ ಪದಾಧಿಕಾರಿಗಳಾದ ಕುಮಾರ ಸ್ವಾಮಿ ಸ್ವಾಗತಿಸಿ, ಕುಶಾಲಪ್ಪ ವಂದಿಸಿದರು. ಪುರುಷರಿಗೆ ಹಗ್ಗಜಗ್ಗಾಟ, ವಾಲಿಬಾಲ್ ಹಾಗೂ 200 ಮೀಟರ್ ಓಟ, ಮಹಿಳೆಯರಿಗೆ ಹಗ್ಗಜಗ್ಗಾಟ, 200 ಮೀಟರ್ ಓಟ , ವಿಷದ ಚೆಂಡು ಸ್ಪರ್ಧೆಗಳು ನಡೆದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.