ವಿರಾಜಪೇಟೆ: ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿರುವುದರಿಂದ ಕೂಡಲೇ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಜೆಡಿಎಸ್ನ ಜಿಲ್ಲಾ ಘಟಕದ ಅಧ್ಯಕ್ಷ ಎಂ. ಸಂಕೇತ್ ಪೂವಯ್ಯ ಒತ್ತಾಯಿಸಿದ್ದಾರೆ.
ಪಟ್ಟಣದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಸಿಐಡಿ ಪೊಲೀಸರು ಪ್ರಕರಣ ಕುರಿತು ತನಿಖೆ ನಡೆಸುತ್ತಿದ್ದಾಗ ಸಚಿವ ಜಾರ್ಜ್ ರಾಜಿನಾಮೆ ನೀಡಿದ್ದರು. ಇದೀಗ ಸಿಬಿಐ ಎಫ್ಐಆರ್ ದಾಖಲಿಸಿ ತನಿಖೆ ನಡೆಸುತಿರುವ ಹಿನ್ನೆಲೆಯಲ್ಲಿ ಸಚಿವರು ರಾಜಿನಾಮೆ ನೀಡಬೇಕು. ನ. 2ರೊಳಗೆ ಜಾರ್ಜ್ ರಾಜಿನಾಮೆ ನೀಡದಿದ್ದರೆ ಜೆಡಿಎಸ್ ಪಕ್ಷದಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.
ಡಿವೈಎಸ್ಪಿ ಗಣಪತಿ ಪ್ರಕರಣದಲ್ಲಿ ಅವರ ಕುಟುಂಬಕ್ಕೆ ನ್ಯಾಯ ದೊರೆಕಿಲ್ಲ. ಸಿಬಿಐ ತನಿಖೆಯಲ್ಲಿ ಗಣಪತಿ ಕುಟುಂಬಕ್ಕೆ ನ್ಯಾಯ ದೊರಕುವ ವಿಶ್ವಾಸವಿದ್ದು, ಮುಂದೆ ಯಾವ ಅಧಿಕಾರಿಗೂ ಈ ರೀತಿಯ ಸ್ಥಿತಿ ಬರಬಾರದು. ಕೊಡಗಿನಲ್ಲಿ ಕಾಡಾನೆ ದಾಳಿಯಿಂದ ಈ ತನಕ 32ಮಂದಿ ಸಾವನ್ನಪ್ಪಿದ್ದರೂ ಈ ಸಂಬಂಧ ಅರಣ್ಯ ಸಚಿವರು ನಿರಾಸಕ್ತಿ ವಹಿಸಿದ್ದಾರೆ. ಕೊಡಗಿನ ಜಲ್ವಂತ ಸಮಸ್ಯೆಗಳು ತಾರಕಕ್ಕೇರುವ ಮೊದಲು ಸರ್ಕಾರ ಜಿಲ್ಲೆಯ ಕುರಿತು ಕಾಳಜಿ ವಹಿಸಬೇಕು ಎಂದು ಆಗ್ರಹಿಸಿದರು.
ಗೋಷ್ಠಿಯಲ್ಲಿ ಜೆಡಿಎಸ್ನ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಎಸ್.ಎಚ್. ಮತೀನ್, ನಗರ ಸಮಿತಿ ಅಧ್ಯಕ್ಷ ಪಿ.ಎ. ಮಂಜುನಾಥ್, ವಕೀಲ ಅಮೃತ್ ಸೋಮಯ್ಯ, ಅಲ್ಪ ಸಂಖ್ಯಾತರ ಘಟಕದ ಜಿಲ್ಲಾ ಸಮಿತಿ ಉಪಾಧ್ಯಕ್ಷ ಅಯಾಜ್ ಷರೀಫ್, ಅಲ್ಪ ಸಂಖ್ಯಾತರ ಘಟಕದ ನಗರ ಸಮಿತಿ ಅಧ್ಯಕ್ಷ ಆರ್.ಎ. ಸಕ್ಲೇನ್, ಪಟ್ಟಣ ಪಂಚಾಯಿತಿ ಸದಸ್ಯೆ ನಾಗಮ್ಮ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.