ಸೋಮವಾರಪೇಟೆ: ಕೊಡಗು ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಹಾಗೂ ವಿಮಾನ ನಿಲ್ದಾಣ ಸ್ಥಾಪಿಸುವುದು ನನ್ನ ಮಂದಿನ ಗುರಿಯಾಗಿದ್ದು, ಸೋಮವಾರಪೇಟೆ ತಾಲ್ಲೂಕಿನಲ್ಲಿ ಪಾಲಿಟೆಕ್ನಿಕ್ ಮತ್ತು ಐಟಿಐ ಕಾಲೇಜು ಸ್ಥಾಪಿಸುವ ಕನಸಿದೆ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು.
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಮಂಗಳೂರು ಪ್ರಾಂತ್ಯದ ವತಿಯಿಂದ ನಗರದಲ್ಲಿ ಸ್ಥಾಪನೆಯಾಗಿರುವ ಅಗ್ನಿಶಾಮಕ ಠಾಣೆಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.
ಗುಂಡೂರಾವ್ ಮುಖ್ಯಮಂತ್ರಿಯಾಗಿದ್ದಾಗ ಕುಶಾಲನಗರದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಲಾಯಿತು. ಸೋಮವಾರಪೇಟೆಯಲ್ಲಿಯೂ ಅಗ್ನಿಶಾಮಕ ಠಾಣೆ ಸ್ಥಾಪಿಸಬೇಕೆಂಬ ಹೋರಾಟವೂ ಕೂಡಾ ಅಂದು ನಡೆದಿತ್ತು. ನನ್ನ ಶಾಸಕತ್ವದ ಅವಧಿಯಲ್ಲಿ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಅಗ್ನಿಶಾಮಕ ಠಾಣೆಯು ಆರಂಭಗೊಳ್ಳಲು ಸಾಧ್ಯವಾಗಿರುವುದು ಸಂತಸ ತಂದಿದೆ ಎಂದರು.
ಸದ್ಯಕ್ಕೆ ಖಾಸಗಿ ಕಟ್ಟಡದಲ್ಲಿ ಠಾಣೆ ಕಾರ್ಯ ನಿರ್ವಹಿಸುತ್ತದೆ. ಮುಂದೆ ನಗರ ವ್ಯಾಪ್ತಿಯಲ್ಲಿ ಸೂಕ್ತ ಜಾಗವನ್ನು ಗುರುತಿಸಿ 3 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಠಾಣೆ ನಿರ್ಮಿಸಲಾಗುತ್ತದೆ ಎಂದರು.
ಮುಖ್ಯ ಅತಿಥಿಗಳಾಗಿ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾ ನಿದೇರ್ಶಕ ಡಾ.ಡಿ.ವಿ.ಗುರುಪ್ರಸಾದ್ ಮಾತನಾಡಿ ಅಗ್ನಿಶಾಮಕ ದಳದವರು ಆಪದ್ಬಾಂಧವರು ಎಂದರು.
ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ನಿರ್ದೇಶಕ ಬಿ.ಜೆ.ಚಂಗಪ್ಪ ಮಾತನಾಡಿ, ಸಹಾಯಕ್ಕಾಗಿ ದೂರವಾಣಿ ಸಂಖ್ಯೆ 284101 ಹಾಗೂ ತುರ್ತುಸೇವೆಗೆ 101 ಕ್ಕೆ ಕರೆಮಾಡಬೇಕೆಂದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರವಿ ಕುಶಾಲಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ವಿ.ಕೆ.ಲೋಕೇಶ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಎನ್.ಎಸ್.ಮೂರ್ತಿ, ಅಗ್ನಿಶಾಮಕ ದಳದ ಜಿಲ್ಲಾ ಪ್ರಭಾರ ಅಧಿಕಾರಿ ಓಬಯ್ಯ ಮೂಲ್ಯ, ಪ್ರಾದೇಶಿಕ ಅಧಿಕಾರಿ ಬಸವಣ್ಣ, ವಿ.ಎಸ್.ಎಸ್.ಎನ್.ಬಿ ಅಧ್ಯಕ್ಷ ಬಿ.ಡಿ.ಮಂಜುನಾಥ್ ಉಪಸ್ಥಿತರಿದ್ದರು. ಠಾಣೆಯ ಸಿಬ್ಬಂದಿ ನವೀನ್ಚಂದ್ರ ಸ್ವಾಗತಿಸಿ, ಭರತ್ಕುಮಾರ್ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.