ADVERTISEMENT

ತ್ಯಾಜ್ಯ ನಿರ್ವಹಣೆಗೆ ಜಿಲ್ಲಾಧಿಕಾರಿ ಸೂಚನೆ

ಲೋಕ ಅದಾಲತ್: ಕಾಫಿ ಪಲ್ಪಿಂಗ್ ಘಟಕ

​ಪ್ರಜಾವಾಣಿ ವಾರ್ತೆ
Published 2 ಜುಲೈ 2013, 8:12 IST
Last Updated 2 ಜುಲೈ 2013, 8:12 IST

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಫಿ ಪಲ್ಪಿಂಗ್ ಘಟಕಗಳಿಂದ ಉಂಟಾಗುವ ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಕಾಫಿ ಬೆಳೆಗಾರರಲ್ಲಿ ಹಾಗೂ ಪಲ್ಪಿಂಗ್ ಘಟಕಗಳ ಮಾಲೀಕರಿಗೆ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿ ಡಾ.ಎನ್.ವಿ. ಪ್ರಸಾದ್  ಪರಿಸರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಭಾಗ ಮಟ್ಟದ ಲೋಕ ಅದಾಲತ್‌ಗೆ ಮಾಹಿತಿ ನೀಡುವ ಬಗ್ಗೆ ನಗರದ ಕೋಟೆ ಹಳೇ ವಿಧಾನಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಇದೇ ತಿಂಗಳ 3 ರಂದು (ಬುಧವಾರ) ಮೈಸೂರಿನಲ್ಲಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಮೈಸೂರಿನ ವಿಭಾಗ ಮಟ್ಟದ ಲೋಕ ಅದಾಲತ್ ಪೂರ್ವಭಾವಿ ಸಭೆ ನಡೆಯಲಿದ್ದು, ಆ ನಿಟ್ಟಿನಲ್ಲಿ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಸಭೆಯಲ್ಲಿ ಪರಿಶೀಲನೆ ನಡೆಸಲಾಯಿತು.

ಕಾವೇರಿ ನದಿ ಪಾತ್ರ ಸೇರಿದಂತೆ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಘನ ತ್ಯಾಜ್ಯ ವಿಲೇವಾರಿ ಸಂಬಂಧಿಸಿದಂತೆ ಇದುವರೆಗೆ ನಿರ್ವಹಣೆ ಮಾಡಲಾಗಿರುವ ಕ್ರಮಗಳು,  ಆನೆ-ಮಾನವ ಸಂಘರ್ಷ, ಪರಿಸರ ಸಂರಕ್ಷಣೆ ಮತ್ತಿತರ ವಿಷಯಗಳ ಕುರಿತು ಚರ್ಚೆ ನಡೆಯಿತು.

ಕಾವೇರಿ ನದಿಪಾತ್ರದ ಪ್ರದೇಶಗಳಲ್ಲಿ ಪರಿಸರ ಸಂರಕ್ಷಣೆ ಕಾಪಾಡುವುದು, ಕಾವೇರಿ ನದಿಗೆ ಯಾವುದೇ ರೀತಿಯ ಘನ ತ್ಯಾಜ್ಯಗಳು ಸೇರದಂತೆ ಎಚ್ಚರಿಕೆ ವಹಿಸುವುದು, ಆ ನಿಟ್ಟಿನಲ್ಲಿ ಗ್ರಾಮಸ್ಥರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಡಾ.ಎನ್.ವಿ.ಪ್ರಸಾದ್ ಅವರು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಮಾತನಾಡಿ, ಕಾವೇರಿ ನದಿಗೆ ಕಲುಷಿತ ನೀರು ಸೇರದಂತೆ ನದಿಪಾತ್ರದ ಗ್ರಾಮಗಳಲ್ಲಿನ ಚರಂಡಿಯಿಂದ ಹರಿಯುವ ನೀರು ಒಂದು ಕಡೆ ಸೇರಲು ಇಂಗುಗುಂಡಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಜಿ.ಪ್ರಭು, ನಗರಾಭಿವೃದ್ಧಿ ಕೋಶದ ಅಧಿಕಾರಿ ಬಿಳಿಕೆಂಚಪ್ಪ, ಜಿಲ್ಲಾ ಪಂಚಾಯಿತಿ ಕಾರ್ಯಪಾಲಕ ಅಭಿಯಂತರರಾದ ಎ.ಸಿ.ಮಂಜುನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ಶಿವಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಮುತ್ತಪ್ಪ, ನಗರಸಭೆ ಆಯುಕ್ತ ಎನ್.ಎಂ.ಶಶಿಕುಮಾರ್, ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.