ಸೋಮವಾರಪೇಟೆ: ಮುಂದಿನ ವಾರದಿಂದ ಆರಂಭವಾಗುವ ಶೈಕ್ಷಣಿಕ ವರ್ಷದ ಪರೀಕ್ಷೆಗಳು ಪಾರದರ್ಶಕವಾಗಿ ನಡೆಯಲು ಮುಖ್ಯ ಶಿಕ್ಷಕರು ಹೆಚ್ಚಿನ ಗಮನ ಹರಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಮಚಂದ್ರರಾಜೇ ಅರಸ್ ಅವರು ಸಲಹೆ ನೀಡಿದರು.
ಇಲ್ಲಿನ ಚನ್ನಬಸಪ್ಪ ಸಭಾಂಗಣದಲ್ಲಿ ಶನಿವಾರ ನಡೆದ ತಾಲ್ಲೂಕಿನ ವಿವಿಧ ಶಾಲೆಗಳ ಮುಖ್ಯ ಶಿಕ್ಷಕರ ಸಭೆ ಹಾಗೂ ಎಚ್ಆರ್ಎಂಎಸ್ ಮಾಹಿತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಸ್ತುನಿಷ್ಠ ಪರೀಕ್ಷೆಗಳಿಗೆ ಎಲ್ಲಾ ಶಿಕ್ಷಕರು ತಯಾರಾಗಬೇಕು. ಪ್ರಸಕ್ತ ವರ್ಷದ ಫಲಿತಾಂಶ ಪ್ರಕಟಿಸಿದ ಬಳಿಕ ಏಪ್ರಿಲ್ 8ರಿಂದಲೇ ಮುಂದಿನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳ ದಾಖಲಾತಿಯನ್ನು ಆರಂಭಿಸಬೇಕು.
ಸರ್ಕಾರಿ ಶಾಲೆಗಳ ಸೌಲಭ್ಯಗಳ ಬಗ್ಗೆ ಪೋಷಕರಿಗೆ ಸರಿಯಾದ ಮಾಹಿತಿ ನೀಡುವುದರ ಮೂಲಕ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣವನ್ನು ಹೆಚ್ಚಿಸಲು ಕ್ರಮ ವಹಿಸಬೇಕು ಎಂದು ಅವರು ಸೂಚಿಸಿದರು.
ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಡಿ.ರಮಾನಂದ, ತಾಲ್ಲೂಕು ಸಂಘದ ಅಧ್ಯಕ್ಷ ಕೆ.ಬಿ.ಪ್ರಕಾಶ್, ವಿರಾಜಪೇಟೆ ತಾಲ್ಲೂಕು ಸಂಘದ ಕಾರ್ಯದರ್ಶಿ ಎ.ವಿ.ಮಂಜುನಾಥ್, ಜಿಲ್ಲಾ ಸಂಘದ ಮಾಜಿ ಅಧ್ಯಕ್ಷ ಎಸ್.ಎ.ಯೋಗೇಶ್ ಮತ್ತಿತರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಟಿ.ಡಿ.ರಮಾನಂದ ಅವರನ್ನು ಶಿಕ್ಷಕರ ಸಂಘದ ತಾಲೂಕು ಘಟಕದ ವತಿಯಿಂದ ಸನ್ಮಾನಿಸಲಾಯಿತು.
ಸಂಘದ ಅಧ್ಯಕ್ಷ ಪ್ರಕಾಶ್ ಸ್ವಾಗತಿಸಿ, ಕಾರ್ಯದರ್ಶಿ ಎಚ್.ಎನ್. ಮಂಜುನಾಥ್ ನಿರೂಪಿಸಿದರು. ನಿರ್ದೇಶಕ ಚೇತನ್ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.